
ಚಳ್ಳಕೆರೆ: ‘ರೈತರು ಬೆಳೆದ ತೊಗರಿಗೆ ಸರ್ಕಾರ ಪ್ರತಿ ಕ್ವಿಂಟಲ್ಗೆ ₹ 8,000 ಬೆಂಬಲ ಬೆಲೆ ನೀಡಿ ತೊಗರಿ ಖರೀದಿಸಲು ಖರೀದಿ ಕೇಂದ್ರವನ್ನು ಆರಂಭಿಸಲಾಗಿದೆ’ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಮೀರಸಾಬಿಹಳ್ಳಿ ಗ್ರಾಮದ ರಾಣಿಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ತೆರೆಯಲಾದ ತೊಗರಿ ಖರೀದಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
‘ತಾಲ್ಲೂಕಿನ ರೈತರು ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ನೇರವಾಗಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು’ ಎಂದು ತಿಳಿಸಿದರು.
ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಶಿವಲಿಂಗಪ್ಪ ಮಾತನಾಡಿ, ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಸರಿಯಾಗಿ ಮಳೆ ಬಾರದ ಕಾರಣ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಮಧ್ಯಂತರ ಬೆಳೆ ಪರಿಹಾರ ರೈತರ ಕೈಗೆ ಸೇರದೆ ರೈತರು ಸಾಲ ಮಾಡಿಕೊಂಡು ಕಷ್ಟಕ್ಕೆ ಒಳಗಾಗಿದ್ದರು. ತೊಗರಿ ಖರೀದಿ ಕೇಂದ್ರ ಆರಂಭ ಮಾಡಿರುವುದರಿಂದ ರೈತರಿಗೆ ಸ್ವಲ್ಪಮಟ್ಟಿಗಾದರೂ ಅನುಕೂಲವಾಗಬಹುದು. ಮುಂದಿನ ದಿನಗಳಲ್ಲಿ ತೊಗರಿ ಬೆಳೆಯ ಖರೀದಿ ಬೆಲೆಯನ್ನು ಹೆಚ್ಚಿಸಲು ಸರ್ಕಾರ ಮನಸ್ಸು ಮಾಡಬೇಕು. ಇದರಿಂದ ಬರಪೀಡಿತ ತಾಲ್ಲೂಕುಗಳ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಮನವಿ ಮಾಡಿದರು.
ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮ ನಿರ್ದೇಶನ ಸದಸ್ಯ ರಂಗಸ್ವಾಮಿ, ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಂಶಿ, ರಾಜು, ಮಂಜುನಾಥ್, ಪ್ರಕಾಶ್, ಭೀಮರೆಡ್ಡಿ, ಧನಂಜಯರೆಡ್ಡಿ, ತಿಪ್ಪೇಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.