ADVERTISEMENT

ಉಪ್ಪಾರರಿಗೆ ಮೀಸಲಾತಿ ನೀಡದಿದ್ದಲ್ಲಿ ಪ್ರತಿಭಟನೆ

ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 4:10 IST
Last Updated 31 ಜನವರಿ 2023, 4:10 IST
ಹೊಸದುರ್ಗದ ಭಗೀರಥ ಗುರುಪೀಠದಲ್ಲಿ ಕುಲ ಶಾಸ್ತ್ರೀಯ ಅಧ್ಯಯನ ಕುರಿತು ಆಯೋಜಿಸಿದ್ದ ಸಭೆಯನ್ನು ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಉದ್ಘಾಟಿಸಿದರು.
ಹೊಸದುರ್ಗದ ಭಗೀರಥ ಗುರುಪೀಠದಲ್ಲಿ ಕುಲ ಶಾಸ್ತ್ರೀಯ ಅಧ್ಯಯನ ಕುರಿತು ಆಯೋಜಿಸಿದ್ದ ಸಭೆಯನ್ನು ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಉದ್ಘಾಟಿಸಿದರು.   

ಹೊಸದುರ್ಗ: ಪ್ರಸ್ತುತ ಉಪ್ಪಾರರ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ವರದಿ ಪೂರ್ಣಗೊಂಡ ನಂತರ ವರದಿಯನ್ವಯ ಮೀಸಲಾತಿ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಭಗೀರಥ ಗುರುಪೀಠ ದಲ್ಲಿ ಸೋಮವಾರ ಆಯೋಜಿಸಿದ್ದ ಕುಲಶಾಸ್ತ್ರೀಯ ಅಧ್ಯಯನದ ಪೂರ್ಣ ಹಂತದ ಬಗೆಗಿನ ಸಭೆಯಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಉಪ್ಪಾರರ ಕುಲಶಾಸ್ತ್ರೀಯ ಅಧ್ಯಯನದ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಕುಟುಂಬಗಳ ನೆಲೆ, ತಾಲ್ಲೂಕು ವಾರು ಸಮೀಕ್ಷೆ ನಡೆಸಿ, ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಈಗಾಗಲೇ ಜೂನ್ ತಿಂಗಳಲ್ಲಿ ಬೃಹತ್ ಸಮಾವೇಶ ಮಾಡಿ, ಮೀಸಲಾತಿ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಮೀಸಲಾತಿ ಕಲ್ಪಿಸದಿದ್ದಲ್ಲಿ ತಾಲ್ಲೂಕುವಾರು ಪ್ರತಿಭಟನೆ ಮಾಡಲಾಗುವುದು. ನಂತರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ADVERTISEMENT

‘2017–18ರಲ್ಲಿ ₹ 8 ಲಕ್ಷ ಅನುದಾನ ನೀಡಿ, ಹಂಪಿ ವಿಶ್ವವಿದ್ಯಾಲಯದ ಮೇತ್ರಿ ಅವರನ್ನು ಕುಲಶಾಸ್ತ್ರೀಯ ಅಧ್ಯಯನಕ್ಕೆ ನೇಮಿಸಲಾಯಿತು. ಹಿಂದೆ ಪ್ರವರ್ಗ– 1ರಲ್ಲಿ 46 ಜಾತಿಗಳಿದ್ದವು. ಆಗ ಶೇ 4ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಸ್ತುತ 96 ಜಾತಿಗಳಿವೆ. ಈಗಲೂ ಶೇ 4ರಷ್ಟು ಮಾತ್ರ ಮೀಸಲಾತಿ ಇದೆ. ಉಪ್ಪಾರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ’ ಎಂದು ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು.

‘ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕಲ್ಪಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆಯಲಾಗಿದೆ. ಕುಲ ಶಾಸ್ತ್ರೀಯ ಅಧ್ಯಯನದ ವರದಿ ಬಂದ ನಂತರ ಎಲ್ಲ ಮಾಹಿತಿ ಕ್ರೋಢೀಕರಿಸಿ ಉಪ್ಪಾರರಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿ, ಮೀಸಲಾತಿ ಪಡೆಯೋಣ’ ಎಂದರು.

ಕುಲಶಾಸ್ತ್ರೀಯ ಅಧ್ಯಯನದ ಮುಖ್ಯಸ್ಥ ಮೇತ್ರಿ, ಬ. ಮೈಲಾರಪ್ಪ, ಕಲ್ಲೇಶ್, ಲಕ್ಷ್ಮಣ್ ಉಪ್ಪಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.