ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಕೇಂದ್ರ ಸಚಿವ ಸಂಪುಟ ಕೂಡಲೇ ಒಪ್ಪಿಗೆ ನೀಡಬೇಕು ಹಾಗೂ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಚಿವ ಎ.ನಾರಾಯಣಸ್ವಾಮಿ ಕೋರಿಕೊಂಡರು.
ನವದೆಹಲಿಯಲ್ಲಿ ಶೇಖಾವತ್ ಅವರನ್ನು ಭೇಟಿಯಾದ ನಾರಾಯಣಸ್ವಾಮಿ ಈ ಕುರಿತು ಚರ್ಚೆ ನಡೆಸಿದರು. ಬರದನಾಡು ಚಿತ್ರದುರ್ಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡರು.
‘ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ರಾಷ್ಟ್ರೀಯ ಯೋಜನೆಗಳ ಅನುಷ್ಠಾನ ಸಂಚಾಲನಾ ಸಮಿತಿ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಕೋರಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದ ರೀತಿಗೆ ಋಣಿಯಾಗಿದ್ದೇವೆ’ ಎಂದರು.
‘ನಿರಂತರ ಬರಪರಿಸ್ಥಿತಿಯಿಂದ ಕಂಗೆಟ್ಟಿರುವ ಜನರು ಜೀವನೋಪಾಯಕ್ಕೆ ವಲಸೆ ಹೋಗುತ್ತಿದ್ದಾರೆ. ಕೆಲಸ ಅರಸಿ ಹಳ್ಳಿಯಿಂದ ನಗರಕ್ಕೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಅನುಷ್ಠಾನಗೊಂಡರೆ ವಲಸೆ ತಡೆಯಲು ಸಾಧ್ಯವಾಗುತ್ತದೆ. ಸುಮಾರು ಎರಡು ಲಕ್ಷ ಹೆಕ್ಟೇರ್ ಒಣಭೂಮಿಗೆ ಈ ಯೋಜನೆ ನೀರುಣಿಸಲಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರಿಗೆ ಇದರಿಂದ ಅನುಕೂಲವಾಗಲಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.