ಚಿತ್ರದುರ್ಗ: ಪೂರ್ವ ಮುಂಗಾರು ಉತ್ತಮ ರೀತಿಯಲ್ಲಿ ಆಗಿದ್ದು, ರೈತರು ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ರೈತರಿಗೆ ಸಲಹೆ ನೀಡಿದ್ದಾರೆ.
ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕ ಸ್ವಾಭಾವಿಕವಾಗಿ ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದೆ.
ಕ್ಯಾಲ್ಸಿಯಂ, ಮೆಗ್ನೇಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬಿಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸಿಗಳ ಬೆಳವಣಿಗೆ ಮತ್ತು ಅಭಿವೃದ್ಧಿ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ.
ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದೆ. ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತುರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ.
ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ ಸಾರಜನಕ, ರಂಜಕ ಮತ್ತು ಪೊಟ್ಯಾಷ್ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.
ಮಾರುಕಟ್ಟೆಯಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ಅರಳು ರೂಪದ ಡಿಎಪಿ ರಸಗೊಬ್ಬರ ಲಭ್ಯವಿದೆ. ಇವುಗಳ ಗುಣಮಟ್ಟದಲ್ಲಿ ಮತ್ತು ಶೇಕಡ ಪೋಷಕಾಂಶಗಳಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ರೈತರು ಯಾವುದೇ ಗೊಂದಲವಿಲ್ಲದೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಡಿಎಪಿ ರಸಗೊಬ್ಬರ ಬಳಸಬಹುದಾಗಿದೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.