ADVERTISEMENT

ಚಿತ್ರದುರ್ಗ: ಆಗ್ನೇಯ ಕ್ಷೇತ್ರ; ಮತದಾರರ ಪಟ್ಟಿ ಸೇರ್ಪಡೆಗೆ ಅವಕಾಶ

ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ; ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 1:58 IST
Last Updated 5 ಅಕ್ಟೋಬರ್ 2025, 1:58 IST
ವಿಧಾನ ಪರಿಷತ್‌ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ, ಮತದಾರರ ಪಟ್ಟಿ ತಯಾರಿಕೆ ಸಂಬಂಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದರು
ವಿಧಾನ ಪರಿಷತ್‌ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ, ಮತದಾರರ ಪಟ್ಟಿ ತಯಾರಿಕೆ ಸಂಬಂಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದರು   

ಚಿತ್ರದುರ್ಗ: ‘ವಿಧಾನ ಪರಿಷತ್‌ನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ– 18ರ ಅಡಿ ಹೆಸರು ಸೇರ್ಪಡೆಗೆ ನ. 6ರವರೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗದಿಪಡಿಸಿದ್ದಾರೆ. ನ. 1, 2025ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ಧಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ’ ಎಂದರು.

ADVERTISEMENT

‘ಮತದಾರ ಪಟ್ಟಿ ತಯಾರಿಕೆಗೆ ಸೆ. 30ರಂದು ಅಧಿಸೂಚನೆ ಹೊರಡಿಸಲಾಗಿದೆ. ಅ. 15ರಂದು ಮೊದಲ ಬಾರಿಗೆ ಹಾಗೂ 25ರಂದು ಎರಡನೇ ಬಾರಿಗೆ ಅಧಿಸೂಚನೆಯ ಪ್ರಕಟಣೆ ನೀಡಲಾಗುವುದು. ನಮೂನೆ– 18ರಲ್ಲಿ ಅರ್ಜಿ ಸಲ್ಲಿಸಲು ನ. 6 ಕಡೆಯ ದಿನವಾಗಿದೆ. ನ. 20ರವರೆಗೆ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾಗುವುದು. ನ. 25ರಂದು ಕರಡು ಪ್ರತಿ ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಡಿ. 10 ಆಕ್ಷೇಪಣೆಗಳನ್ನು ಸಲ್ಲಿಸಲು ಕಡೆಯ ದಿನವಾಗಿದೆ. ಡಿ. 25ರೊಳಗೆ ಆಕ್ಷೇಪಣೆಗಳ ವಿಲೇವಾರಿಗೆ ಕ್ರಮ ವಹಿಸಲಾಗುವುದು. ಡಿ. 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಹೆಸರು ನೋಂದಾಯಿಸಲು ಇಚ್ಛಿಸುವವರು ಪದವೀಧರ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು. ನ.1, 2025 ನಿರ್ಧಿಷ್ಟಪಡಿಸಿದ ಅರ್ಹ ದಿನಾಂಕವಾಗಿದ್ದು, ಇದಕ್ಕೂ ಕನಿಷ್ಠ 3 ವರ್ಷಗಳ ಮೊದಲು ರಾಜ್ಯ ಸರ್ಕಾರ ಅಧಿಸೂಚಿಸಿರುವ ವಿವಿಯಿಂದ ಪದವಿ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು’ ಎಂದು ತಿಳಿಸಿದರು.

‘ವಿದ್ಯಾರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್, ಕಿಸಾನ್ ಅಥವಾ ಅಂಚೆ ಕಚೇರಿ ಚಾಲ್ತಿ ಖಾತೆಯ ಪಾಸ್‌ಬುಕ್, ಚುನಾವಣೆ ಆಯೋಗ ನಿಗದಿಪಡಿಸಿದ ಇತರೆ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ನಮೂನೆ– 18 ಅರ್ಜಿಯೊಂದಿಗೆ ವಾಸಸ್ಥಳ ವ್ಯಾಪ್ತಿಯ ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ನಿರ್ದಿಷ್ಟಪಡಿಸಿದ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು’ ಎಂದರು.

‘ಚುನಾವಣಾ ಆಯೋಗದ ವೆಬ್‍ಸೈಟ್ http://eci.gov.in/files/category/356–forms–for–registration–in–eroll/ ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ https://ceo.karnataka.gov.in/20/download–forms/en ಮೂಲಕ ಅರ್ಜಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು’ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಚುನಾವಣೆ ತಹಶೀಲ್ದಾರ್ ನಾಗವೇಣಿ, ಚುನಾವಣೆ ಶಿರಸ್ತೇದಾರ್ ಮಲ್ಲಿಕಾರ್ಜುನ ನಾಯಕ, ಕಾಂಗ್ರೆಸ್‌ ಮುಖಂಡರಾದ ಡಿ.ಎನ್.ಮೈಲಾರಪ್ಪ, ಸಿ.ಜೆ.ನಾಸೀರುದ್ದೀನ್, ಮುಖಂಡ ಪ್ರಕಾಶ್ ರಮಾನಾಯ್ಕ, ಜೆಡಿಎಸ್‌ ನಾಯಕ ಡಿ.ಗೋಪಾಲಸ್ವಾಮಿ ನಾಯಕ, ಬಿಜೆಪಿ ಮುಖಂಡ ಯಶವಂತ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.