
ಸಿರಿಗೆರೆ: ಭರಮಸಾಗರ ಹೋಬಳಿಯ ಸುತ್ತಲಿನ 30 ಹಳ್ಳಿಗಳಿಗೆ ವಾಣಿವಿಲಾಸ ಸಾಗರದ ಶುದ್ದ ಕುಡಿಯುವ ನೀರು ಒದಗಿಸುವ ಯೋಜನೆ ಕಾರ್ಯಗತವಾಗಲಿದೆ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.
ಭರಮಸಾಗರ ಸಮೀಪದ ಬಹದ್ದೂರುಗಟ್ಟ ಗ್ರಾಮದಲ್ಲಿ ಗುರುವಾರ ₹ 30 ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
100 ಕಿ.ಮೀ. ದೂರದಿಂದ ನೀರು ತರುವ ಸಾಹಸದ ಯೋಜನೆ ಇದು. ಇದು ಕಾರ್ಯಗತವಾದಾಗ ಹೊಳಲ್ಕೆರೆ ಕ್ಷೇತ್ರದ ನೂರಾರು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ದೊರೆಯುತ್ತದೆ ಎಂದರು.
‘ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೂ ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಸಿಗಬೇಕು. ಅದಕ್ಕಾಗಿ ಕ್ಷೇತ್ರದಾದ್ಯಂತ 12 ಪಬ್ಲಿಕ್ ಶಾಲೆಗಳ ನಿರ್ಮಾಣ ಮಾಡಲಾಗಿದೆ. ಇದರಿಂದ ಗ್ರಾಮೀಣ ಮಕ್ಕಳೂ ಉತ್ತಮ ಶಿಕ್ಷಣ ಪಡೆದು ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಭರಮಸಾಗರ ಮಂಡಲ ಅಧ್ಯಕ್ಷ ಎನ್.ಟಿ. ಬಸವರಾಜ್, ಶೈಲೇಶ್ ಕುಮಾರ್, ಮಂಜುನಾಥ್, ಮೋಹನ್ ಕುಮಾರ್, ಕಲ್ಲೇಶ್, ಆನಂದಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ತಿಪ್ಪೇಸ್ವಾಮಿ, ಸುಮಂಗಲ, ಕೊಟ್ರೇಶ್, ತಿಪ್ಪೇಶ್, ಅಂಜಿ, ಅರುಣ್, ಜಗದೀಶ್, ಶ್ರೀನಿವಾಸ್, ಗುರುಸಿದ್ದಪ್ಪ, ಶಿವಣ್ಣ, ಬಸಣ್ಣ, ರಾಜಣ್ಣ, ಲೋಲಾಕ್ಷಮ್ಮ, ಗ್ರಾಮದ ಮುಖಂಡರು ಹಾಜರಿದ್ದರು.
ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ತಿಪ್ಪೇಸ್ವಾಮಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.