ADVERTISEMENT

ಎದೆ ನೋವು: ಚಿಕಿತ್ಸೆ ಪಡೆದ ಜಮೀರ್‌

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 11:37 IST
Last Updated 15 ಏಪ್ರಿಲ್ 2024, 11:37 IST
ಜಮೀರ್‌ ಅಹ್ಮದ್‌ ಖಾನ್‌
ಜಮೀರ್‌ ಅಹ್ಮದ್‌ ಖಾನ್‌   

ಚಿತ್ರದುರ್ಗ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು.

ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಜಮೀರ್‌ ಆರೋಗ್ಯ ಪರೀಕ್ಷಿಸಲಾಗಿದ್ದು, ಇಕೊ, ಇಸಿಜಿ, ರಕ್ತ ಪರೀಕ್ಷೆ ನಡೆಸಲಾಗಿದೆ. ಆರೋಗ್ಯ ಸ್ಥಿರವಾಗಿರುವುದನ್ನು ಖಚಿತಪಡಿಸಿದ ವೈದ್ಯರು, ವಿಶ್ರಾಂತಿಗೆ ಸಲಹೆ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ ಪರ ಮತಯಾಚನೆಗೆ ಜಮೀರ್‌ ಅವರು ಸೋಮವಾರ ಜಿಲ್ಲೆಗೆ ಆಗಮಿಸಿದ್ದರು. ನಗರದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಸಂಜೆ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಸಭೆಗೆ ತೆರಳುವ ಮುನ್ನವೇ ಜಮೀರ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.

ADVERTISEMENT

‘ವಡೆ ಚೆನ್ನಾಗಿದೆ ಎಂದು ಬೆಳಿಗ್ಗೆ ಕೊಂಚ ಹೆಚ್ಚಾಗಿ ತಿಂಡಿ ತಿಂದಿದ್ದೆ. ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಎದೆನೋವು ಕಾಣಿಸಿಕೊಂಡಿತು. ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ಧಾವಿಸಿ ಆರೋಗ್ಯ ಪರೀಕ್ಷಿಸಿದೆ. ವೈದ್ಯರ ಸಲಹೆ ಪಡೆದಿದ್ದು, ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವೆ’ ಎಂದು ಸಚಿವ ಜಮೀರ್‌ ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.