ADVERTISEMENT

‘ಕಾಂಗ್ರೆಸ್ಸಿಗರು ಗಾಂಜಾ ಹಣದಲ್ಲಿ ಬದುಕುತ್ತಿದ್ದಾರೆ’

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2017, 9:31 IST
Last Updated 7 ಅಕ್ಟೋಬರ್ 2017, 9:31 IST
ನಳಿನ್‌ ಕುಮಾರ್‌ ಕಟೀಲ್‌
ನಳಿನ್‌ ಕುಮಾರ್‌ ಕಟೀಲ್‌   

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಮಾಫಿಯಾ ಕಾಂಗ್ರೆಸ್‌ ಮುಖಂಡರ ಹಿಡಿತದಲ್ಲೇ ಇದೆ. ಸಚಿವರು ಸೇರಿದಂತೆ ಕಾಂಗ್ರೆಸ್ಸಿಗರು ಗಾಂಜಾ ಹಣದಲ್ಲಿ ಬದುಕುತ್ತಿದ್ದಾರೆ’ ಎಂದು ಸಂಸದ ನಳಿನ್‌ಕುಮಾರ್‌ ಕಟೀಲ್‌ ಆರೋಪಿಸಿದರು.

ಸಂಸದರ ಕಚೇರಿಯಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ನಾಲ್ಕು ವರ್ಷಗಳಿಂದ ಗಾಂಜಾ ಮಾರಾಟ ಹೆಚ್ಚಾಗಿದೆ. ಈ ಮಾಫಿಯಾ ಮಟ್ಟಹಾಕಲು ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ತಂಡ ರಚಿಸಬೇಕೆಂಬ ಬೇಡಿಕೆ ಇದೆ.

ಈವರೆಗೆ ಯಾವ ಕ್ರಮವೂ ಆಗಿಲ್ಲ. ಸಚಿವರು ಮತ್ತು ಕಾಂಗ್ರೆಸ್‌ ಪಕ್ಷದ ಹಲವು ಮುಖಂಡರ ನೇರ ಹಿಡಿತದಲ್ಲಿ ಗಾಂಜಾ ಮಾಫಿಯಾ ಇದೆ. ಈ ಕಾರಣಕ್ಕಾಗಿಯೇ ಗಾಂಜಾ ಮಾಫಿಯಾವನ್ನು ಪೊಲೀಸರು ನಿಯಂತ್ರಿಸುತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದರು.

ADVERTISEMENT

‘ಜಿಲ್ಲೆಯಲ್ಲಿ ಗಾಂಜಾ ಮಾರಾಟ ಜಾಲ ನಿಯಂತ್ರಿಸುವಲ್ಲಿ ಪೊಲೀಸ್‌ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ಸೋತಿದೆ. ಜಿಲ್ಲೆಯಲ್ಲಿ ನಡೆದಿರುವ ಹಲವಾರು ಕೊಲೆಗಳಿಗೆ ಗಾಂಜಾ ಮಾಫಿಯಾದ ನಂಟಿದೆ ಎಂಬ ಆರೋಪವಿದೆ. ಕ್ರಮ ಜರುಗಿಸಬೇಕಾದ ಸ್ಥಾನದಲ್ಲಿರುವ ಆಡಳಿತ ಪಕ್ಷದ ಮುಖಂಡರೇ ಗಾಂಜಾ ಮಾಫಿಯಾವನ್ನು ಬೆಂಬಲಿಸುತ್ತಿದ್ದಾರೆ. ರಾಜ್ಯ ಸರ್ಕಾರ ಈ ಮಾಫಿಯಾ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲೆಯಲ್ಲಿ ಕೇರಳದ ಮಾದರಿಯಲ್ಲಿ ರಾಜಕೀಯ ಹತ್ಯೆಗಳು ನಡೆಯುತ್ತಿವೆ. ಕೇರಳದಲ್ಲಿ ಎಡಪಕ್ಷದ ಕಾರ್ಯಕರ್ತರು ಇಂತಹ ಕೊಲೆ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆ ಕೆಲಸ ಮಾಡುತ್ತಿದ್ದಾರೆ. ಉಳ್ಳಾಲದಲ್ಲಿ ಬುಧವಾರ ನಡೆದ ಜುಬೇರ್‌ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.