ADVERTISEMENT

ಮತದಾನಕ್ಕೆ ಮಳೆಯ ಆತಂಕ

​ಪ್ರಜಾವಾಣಿ ವಾರ್ತೆ
Published 11 ಮೇ 2018, 6:34 IST
Last Updated 11 ಮೇ 2018, 6:34 IST

ಮಂಗಳೂರು: ಅಭ್ಯರ್ಥಿಗಳ ಬಹಿರಂಗ ಪ್ರಚಾರ ಮುಕ್ತಾಯವಾಗಿದೆ. ಅಬ್ಬರ ಮತಯಾಚನೆಯ ನಂತರ ಇದೀಗ ಮಳೆಯ ಆತಂಕ ಎದುರಾಗಿದೆ. ಇದೇ 12 ರಂದು ಮತದಾನ ನಡೆಯಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೇ 11 ಮತ್ತು 12 ರಂದು ಮಧ್ಯಮದಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಬಹುದು ಎನ್ನುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಇದೀಗ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳನ್ನು ಚಿಂತೆಗೀಡು ಮಾಡಿದೆ.

ಶನಿವಾರ ಮಧ್ಯಾಹ್ನದ ನಂತರ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಗಾಳಿ, ಗುಡುಗು ಸಹಿತ ಮಳೆ ಸುರಿಯಬಹುದು ಎಂಬ ಸೂಚನೆ ಬಂದಿದ್ದು, ಇದರಿಂದ ಮತದಾನದ ಪ್ರಮಾಣದ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಹೇಳಲಾಗುತ್ತಿದೆ.

ADVERTISEMENT

ಈಗಾಗಲೇ ಮತದಾನಕ್ಕೆ ಜಿಲ್ಲಾಡಳಿತದ ಜತೆಗೆ ರಾಜಕೀಯ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಮತದಾರರನ್ನು ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗ ವಿಶೇಷ ಸೌಕರ್ಯಗಳನ್ನು ಒದಗಿಸಿದೆ. ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಳೆ ಬಂದಲ್ಲಿ ಈ ಎಲ್ಲ ಸಿದ್ಧತೆಗಳು ಪ್ರಯೋಜನಕ್ಕೆ ಬರದಂತಾಗಲಿವೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.