ಸುಳ್ಯ: ರಾಜ್ಯದಲ್ಲಿ ಇರುವುದು ಮಾಫಿಯ ಸರ್ಕಾರ. ಈ ಸರ್ಕಾರದ ಕೊನೆ ಸದ್ಯದಲ್ಲೇ ಆಗಲಿದೆ. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡದೇ ಬಿಜೆಪಿಗೆ ಅವಕಾಶ ನೀಡಲು ಇಡೀ ರಾಜ್ಯದ ಜನತೆ ಸಿದ್ಧವಾಗಿದೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದರು.
ಭಾನುವಾರ ಇಲ್ಲಿನ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಡೆದ ಬೃಹತ್ ಸಮರ್ಥನಾ ಸಮಾವೇಶದಲ್ಲಿ ಮಾತನಾಡಿದರು.
ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷೆ ಭಾರತಿ ಶೆಟ್ಟಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ‘ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು, ಅ ಮೂಲಕ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಬೆಂಬಲ ದೊರಕಲಿದೆ’ ಎಂದರು. ಶಾಸಕ ಎಸ್.ಅಂಗಾರ ಮಾತ ನಾಡಿ, ‘ಈ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳನ್ನು ನಾವು ಮಾಡಿದ್ದೇವೆ. ಕ್ಷೇತ್ರದ ಜನತೆಯ ಎಲ್ಲ ಆಶೋತ್ತರಕ್ಕೆ ನಾವು ಸ್ಪಂದಿಸಿದ್ದೇವೆ’ ಎಂದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹುಲಿಯಪ್ಪ ಗೌಡ ಅವರು ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಸಂಘಟನೆ ಮತ್ತು ಚುನಾವಣಾ ತಯಾರು ಬಗ್ಗೆ ವಿಷಯ ಮಂಡಿಸಿದರು. ವೇದಿಕೆಯಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಶೀಲಾವತಿ ಮಾಧವ, ಭಾಗೀರಥಿ ಮುರುಳ್ಯ, ಪುಲಸ್ಯ ರೈ, ಶೋಭಾ, ಶುಭದಾ ರೈ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.