ADVERTISEMENT

ಹೃದಯ ಪೋಷಣೆಗೆ ಮಹತ್ವ ನೀಡಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 6:20 IST
Last Updated 1 ಅಕ್ಟೋಬರ್ 2012, 6:20 IST

ಮಂಗಳೂರು: ಬದುಕಿನ ನಿತ್ಯ ಜಂಜಾಟದ ನಡುವೆ ಹೃದಯದ ಆರೋಗ್ಯಕ್ಕೂ ಹೆಚ್ಚಿನ ಗಮನ ನೀಡಬೇಕು ಎಂದು ಪೊಲೀಸ್ ಆಯುಕ್ತ ಮನೀಶ್ ಖರ್ಬಿಕರ್ ಹೇಳಿದರು.

ಇಂಡಿಯಾನ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಎಸ್.ಪಿ. ಕಚೇರಿ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಧ್ಯಮ ಹಾಗೂ ಪೊಲೀಸ್ ಸಿಬ್ಬಂದಿಗೆ ಹೃದಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸರಿಗೆ ವೃತ್ತಿ ಒತ್ತಡ ಹೆಚ್ಚಿರುವುದು. ಹಾಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಕಷ್ಟವಾಗುತ್ತದೆ. ಆದರೆ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಂಡರೆ ಮಾತ್ರ ಕರ್ತವ್ಯ ನಿರ್ವಹಣೆ ಸುಲಭವಾಗುತ್ತದೆ. ಒತ್ತಡದ ಕೆಲಸದಿಂದ ಅನೇಕರಿಗೆ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಉತ್ತಮ ಪರಿಹಾರ ಹೃದಯದ ಆರೋಗ್ಯವನ್ನು ಸರಿಯಾಗಿ ಇಟ್ಟುಕೊಳ್ಳುವುದೇ ಆಗಿದೆ ಎಂದು ಹೇಳಿದರು.

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಉತ್ತಮ ವ್ಯಾಯಾಮ, ಸಕಾಲಿಕ ಆರೋಗ್ಯ ತಪಾಸಣೆ ಅಗತ್ಯ. ವೃತ್ತಿ ಒತ್ತಡದ ನಡುವೆಯೇ ಆರೋಗ್ಯ ಕಾಪಾಡಿಕೊಳ್ಳಲು ಸಮಯ ನಿಗದಿಪಡಿಸಿಕೊಳ್ಳುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.

ನಿವೃತ್ತಿಯ ಕೆಲವೇ ದಿನಗಳಲ್ಲಿ ಅನೇಕ ರೀತಿಯ ಹೃದಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಅನೇಕರು ಹೃದಯಾಘಾತಕ್ಕೂ ಈಡಾಗುತ್ತಿದ್ದಾರೆ. ಇದಕ್ಕಾಗಿ ಆರೋಗ್ಯ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮಾತನಾಡಿದರು.
ಶಿಬಿರದಲ್ಲಿ 175ಕ್ಕೂ ಹೆಚ್ಚು ಪೊಲೀಸರು ಹಾಗೂ ಮಾಧ್ಯಮ ಸಿಬ್ಬಂದಿ ಶಿಬಿರದಲ್ಲಿ ಭಾಗವಹಿಸಿ ತಪಾಸಣೆಗೆ ಒಳಗಾದರು. ಇಂಡಿಯಾನ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಸ್ಪತ್ರೆಯ ಡಾ. ಮುಕುಂದ್, ಪತ್ರಕರ್ತ ರಾಮಕೃಷ್ಣ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.