ಉಳ್ಳಾಲ: ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ಜನಾರ್ದನ ಪೂಜಾರಿ ಅವರು ಪ್ರಾಮಾಣಿಕ, ನಿಷ್ಠಾವಂತ ನಾಯಕರಾಗಿದ್ದು, ಅವರ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ತಾಲ್ಲೂಕಿನ ಇರಾ, ಬಾಳೆಪುಣಿ, ಮುದುಂಗಾರ್ ಕಟ್ಟೆ, ನಂದರಪಡ್ಪು, ನರಿಂಗಾನ, ಅರ್ಕಾಣ, ಪಾಣೇಲ, ಮೋಂಟುಗೋಳಿ, ಫಜೀರು, ಕುರ್ನಾಡು, ಸಜಿಪನಡು, ಸಜಿಪ ಪಡು ಗ್ರಾಮದ ಕಾಂಗ್ರೆಸ್ ಕಾರ್ಯರ್ತರ ಬೂತ್ ಮಟ್ಟದ ಸಭೆ ಮತ್ತು ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯುಪಿಎ ಸರ್ಕಾರದ ಜನಪರ ಕಾರ್ಯಕ್ರಮಗಳಾದ ಕಡ್ಡಾಯ ಶಿಕ್ಷಣ, ಆಹಾರ ಭದ್ರತೆ, ಮಾಹಿತಿ ಹಕ್ಕು, ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮುಂತಾದ ಐತಿಹಾಸಿಕ ಕಾರ್ಯಕ್ರಮಗಳು ಮತ್ತು ಸಿದ್ದರಾಮಯ್ಯ ಅವರ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಮನೆ, ಮನೆಗೆ ಭೇಟಿ ನೀಡಿ ಜನರಿಗೆ ತಿಳಿಸುವ ಮೂಲಕ ಪೂಜಾರಿಯವರ ಗೆಲುವಿಗೆ ಕಾರಣರಾಗಬೇಕು ಎಂದರು.
ಪ್ರಚಾರ ಕಾರ್ಯಕ್ರಮದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ. ಎಸ್. ಗಟ್ಟಿ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಭೂಮಿ ರಾಮಚಂದ್ರ, ಕುರ್ನಾಡು ಗ್ರಾಮ ಪಂಚಾಯಿತಿ ದೇವದಾಸ್ ಭಂಡಾರಿ ಕುರ್ನಾಡು, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿ, ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.