ADVERTISEMENT

ಬಿಜೆಪಿ ಅಧ್ಯಕ್ಷರಿಂದ ಸಾರ್ವಜನಿಕ ಸುಳ್ಳು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 6:24 IST
Last Updated 21 ಫೆಬ್ರುವರಿ 2018, 6:24 IST

ಮಂಗಳೂರು: ‘ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರಿಸ್‌ ಮಗ ಮೊಹಮದ್‌ ನಲಪಾಡ್‌ನಿಂದ ಹಲ್ಲೆಗೊಳಗಾಗಿರುವ ವಿದ್ವತ್‌ ನಮ್ಮ ಕಾರ್ಯಕರ್ತ’ ಎಂದು ಮಂಗಳವಾರ ಮಧ್ಯಾಹ್ನ ಬಿ.ಸಿ.ರೋಡ್‌ನಲ್ಲಿ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಸಂಜೆಯ ವೇಳೆಗೆ ಸುರತ್ಕಲ್‌ನಲ್ಲಿ ಅದನ್ನು ಹಿಂಪಡೆದು ಉದ್ದೇಶಪೂರ್ವಕವಾಗಿ ಸುಳ್ಳು ಹೇಳಿರುವುದಾಗಿ ಸ್ಪಷ್ಟನೆ ನೀಡಿದರು.

ಬಿ.ಸಿ.ರೋಡ್‌ನಲ್ಲಿ ನಡೆದ ನವಶಕ್ತಿ ಸಮಾವೇಶದಲ್ಲಿ ಮಾತನಾಡುವಾಗ ನಲಪಾಡ್ ಪ್ರಕರಣ ಪ್ರಸ್ತಾಪಿಸಿದ ಅವರು, ‘ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಶಾಸಕ ಹ್ಯಾರಿಸ್ ಪುತ್ರನ ವಿರುದ್ಧ ಪ್ರಕರಣದ ದಾಖಲಿಸಲು ವಿಳಂಬ ಮಾಡುವ ಮೂಲಕ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ’ ಎಂದು ಆರೋಪಿಸಿದರು.

‘ಮೊಹಮದ್ ನಲಪಾಡ್‌ ಕೇವಲ ಶಾಸಕನ ಪುತ್ರ ಎಂಬ ಕಾರಣಕ್ಕೆ ವಿಳಂಬ ಮಾಡಲಿಲ್ಲ. ಬದಲಾಗಿ ಅಲ್ಪಸಂಖ್ಯಾತ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸುವಲ್ಲಿ ಹೀಗೆ ಮಾಡಲಾಗಿದೆ. ಕಾಂಗ್ರೆಸ್‌ ಸರ್ಕಾರ ಓಟ್ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಕಾರ್ಯಕರ್ತರ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ’ ಎಂದು ದೂರಿದರು.

ADVERTISEMENT

ಸಂಜೆ ಸುರತ್ಕಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಶಾ, ‘ವಿದ್ವತ್‌ ಬಿಜೆಪಿ ಕಾರ್ಯಕರ್ತನಲ್ಲ. ನಾನು ಉದ್ದೇಶಪೂರ್ವಕವಾಗಿಯೇ ಸುಳ್ಳು ಹೇಳಿದ್ದೆ. ನಾನು ಹಾಗೆ ಹೇಳಿದ್ದರಿಂದ ಹೆಚ್ಚು ಕಾಲ ರಾಜ್ಯದ ಎಲ್ಲೆಡೆ ಆ ಪ್ರಕರಣದ ಬಗ್ಗೆ ಚರ್ಚೆ ನಡೆಯಿತು ಅಲ್ಲವೇ’ ಎಂದು ಮರುಪ್ರಶ್ನೆ  ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.