ಮಂಗಳೂರು: ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ, ಅಶಕ್ತ ವ್ಯಕ್ತಿ, ವಿಧವೆಯರು ಹಾಗೂ ಅಂಗವಿಕಲರಿಗೆ ಮಾಸಿಕ ಪಿಂಚಣಿ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 966 ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆ ತಾಳೆಯಾಗದೇ ಇರುವುದರಿಂದ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪಿಂಚಣಿ ಯೋಜನೆಗಳಲ್ಲಿ ಒಟ್ಟು 1,46,610 ಫಲಾನುಭವಿಗಳು ಪ್ರತಿ ತಿಂಗಳು ಮಾಸಾಶನ ಪಡೆಯುತ್ತಿದ್ದಾರೆ. ಈ ವರ್ಷದ ಸೆಪ್ಟೆಂಬರ್ ಅಂತ್ಯಕ್ಕೆ ಜಿಲ್ಲೆಯಲ್ಲಿ 2,197 ಫಲಾನುಭವಿಗಳಿಗೆ ಪಿಂಚಣಿ ಪಾವತಿಯಾಗದೇ ಇರುವುದು ಕಂಡುಬಂದಿದೆ. ಇದರಲ್ಲಿ 1,231 ಪ್ರಕರಣಗಳು ಸರ್ಕಾರದ ಹಂತದಲ್ಲಿ ಅನುಮೋದನೆಗೆ ಬಾಕಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಪಿಂಚಣಿಗೆ ಸಂಬಂಧಿಸಿದಂತೆ ತೊಂದರೆಗಳು ಇದ್ದಲ್ಲಿ, ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ಹಾಗೂ ಪಿಂಚಣಿ ಮಂಜೂರಾತಿ ಆದೇಶದ ಪ್ರತಿಯನ್ನು ಸಂಬಂಧಪಟ್ಟ ಗ್ರಾಮಕರಣಿಕರಿಗೆ ಅಥವಾ ತಾಲ್ಲೂಕು ಕಚೇರಿಯ ವಿಷಯ ನಿರ್ವಾಹಕರಲ್ಲಿ ನೀಡಬೇಕು. ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆ, ಅಂತ್ಯಸಂಸ್ಕಾರ ಸಹಾಯಧನ ಯೋಜನೆಗಳಲ್ಲಿ ಅನುದಾನ ಮಂಜೂರಾಗಿರುವ ಪ್ರಕರಣಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಂಚಣಿ ಪಾವತಿಯಾಗದೇ ಇರುವ ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ ತಂತ್ರಾಂಶದಲ್ಲಿ ಅಳವಡಿಸಿ, ಸರ್ಕಾರಕ್ಕೆ ಸಲ್ಲಿಸಲಾಗುವುದು. ಪ್ರತಿಯೊಬ್ಬ ಫಲಾನುಭವಿಗೂ ಪಿಂಚಣಿ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.