
ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಒಂಟಿಕಟ್ಟೆಯಲ್ಲಿ ಶನಿವಾರ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಅವರಿಗೆ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೂಡುಬಿದಿರೆ (ದಕ್ಷಿಣ ಕನ್ನಡ): ‘ತುಳುನಾಡಿನ ವೀರ ವನಿತೆ, ರಾಣಿ ಅಬ್ಬಕ್ಕ ಸ್ಫೂರ್ತಿದಾಯಕ ವ್ಯಕ್ತಿತ್ವ. ಆಕೆಯ ಹೆಸರಿನ ಪ್ರಶಸ್ತಿ ಸ್ವೀಕರಿಸಲು ಅವಕಾಶ ಸಿಕ್ಕಿರುವುದು ಯೋಗವೇ ಸರಿ. ತಾಯಿನೆಲದ ಸನ್ಮಾನದಿಂದ ಧನ್ಯನಾಗಿದ್ದೇನೆ’ ಎಂದು ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದಲ್ಲಿ ಶನಿವಾರ ಆರಂಭಗೊಂಡ ಕೋಟಿ ಚೆನ್ನಯ ಜೋಡುಕರೆ ಕಂಬಳೋತ್ಸವದ ಪ್ರಯುಕ್ತ ಜಿಲ್ಲಾ ಕಂಬಳ ಸಮಿತಿ ನೀಡಿದ ‘ವೀರರಾಣಿ ಅಬ್ಬಕ್ಕ' ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಭಿನಂದನಾ ಮಾತುಗಳನ್ನಾಡಿದರು. ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮುಖಂಡ ಕೃಷ್ಣ ಜೆ.ಪಾಲೆಮಾರ್, ಮೂಡುಬಿದಿರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಕಂಬಳ ತಜ್ಞರಾದ ಗರುಣಪಾಲ ಕಡಂಬ, ಭಾಸ್ಕರ್ ಎಸ್.ಕೋಟ್ಯಾನ್ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.