ಮೂಡುಬಿದಿರೆ: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇರಿಸಿ ಯುವತಿಯರ ವಿಡಿಯೊ ಚಿತ್ರೀಕರಿಸಿದ ಮೂವರು ವಿದ್ಯಾರ್ಥಿನಿಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಮೂಡುಬಿದಿರೆ ಘಟಕದ ವಿದ್ಯಾರ್ಥಿಗಳು ಒತ್ತಾಯಿಸಿದರು.
ಘಟನೆ ಖಂಡಿಸಿ ಇಲ್ಲಿನ ಬಸ್ ನಿಲ್ದಾಣದಲ್ಲಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು. ಇದರ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಬೇಕು. ಭವಿಷ್ಯದಲ್ಲಿ ಇಂಥ ಕೃತ್ಯ ನಡೆಯದಂತೆ ಎಚ್ಚರ ವಹಿಸಲು ಆಡಳಿತ ಮಂಡಳಿಗಳಿಗೆ ಸರ್ಕಾರ ಆದೇಶ ನೀಡಬೇಕು ಎಂದು ಪ್ರತಿಭಟನಕಾರರು ಮೂಡುಬಿದಿರೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿದ್ದಪ್ಪ ಅವರ ಮೂಲಕ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.