
ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಮಂಗಳೂರು ವಿಶ್ವವಿದ್ಯಾಲಯ ವಿಭಾಗದ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ನಿವೃತ್ತ ಪ್ರಾಧ್ಯಾಪಕ ಅನಂತಕೃಷ್ಣ ಭಟ್ ಅವರಿಗೆ ಘೋಷಿಸಲಾಗಿದೆ.
ಇವರಿಬ್ಬರ ಜೀವಮಾನ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆೆ ಎಂದು ಸಂಘಟನೆಯ ಜಂಟಿ ಪ್ರಧಾನ ಕಾರ್ಯದರ್ಶಿ ಮಾಧವ ಎಂ.ಕೆ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಲೇಜು ಆಡಳಿತ ನಿರ್ವಹಣೆಯ ಸಾಧನೆಗಾಗಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಕುರಿಯನ್, ಕೆನರಾ ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ ವಿ, ಸಂಶೋಧನಾ ಕ್ಷೇತ್ರದ ಸಾಧನೆಗಾಗಿ ಸ್ಕೂಲ್ ಆಫ್ ಎಕನಾಮಿಕ್ಸ್ ಮಣಿಪಾಲ ಯೂನಿವರ್ಸಿಟಿಯ ಹರೀಶ್ ಜೋಶಿ, ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಪ್ರಾಂಶುಪಾಲ ಶಾಂತಾರಾಮ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿಜ್ಯ ಪ್ರಾಧ್ಯಾಪಕಿ ಸುಭಾಷಿಣಿ ಶ್ರೀವತ್ಸ ಹಾಗೂ ಉಡುಪಿ ಅಜ್ಜರಕಾಡು ಜಿ. ಶಂಕರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜೇಂದ್ರ ಜಿ, ಗ್ರಂಥಪಾಲಕ ವಿಭಾಗದಲ್ಲಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರೊ. ವಿಜಯಲತಾ, ಉಡುಪಿ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯಶೋದಾ, ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ ರಾಧಾಕೃಷ್ಣ, ವಿರಾಜಪೇಟೆ ಕಾವೇರಿ ಕಾಲೇಜಿನ ತಮ್ಮಯ್ಯ ಕೆ.ಎಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ವ್ಯಾಪ್ತಿಯ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜು.26ರಂದು ಮಧ್ಯಾಹ್ನ 2 ಗಂಟೆಗೆ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆಯುವ ‘ಪ್ರೇರಣಾ ದಿವಸ್’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಸಂಘಟನೆ ಪದಾಧಿಕಾರಿಗಳಾದ ಪ್ರೊ. ವಾಣಿ ಯು.ಎಸ್, ಪ್ರೊ. ರಾಜೇಶ್ ಕುಮಾರ್, ಪ್ರೊ. ಆಶಾಲತಾ, ವೆಂಕಟೇಶ್ ನಾಯಕ್, ಸುರೇಂದ್ರ ಶೆಟ್ಟಿ, ಮಮತಾ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.