ADVERTISEMENT

ರಾಜ್ಯ ಆದಿ ದ್ರಾವಿಡ ಸಮಾವೇಶ 24ಕ್ಕೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 4:07 IST
Last Updated 22 ಡಿಸೆಂಬರ್ 2023, 4:07 IST

ಮಂಗಳೂರು: ತುಳು ಭಾಷಿಕ ಆದಿ ದ್ರಾವಿಡ ಸಮುದಾಯದವರ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಡಿ.24ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ರಾಜ್ಯ ಆದಿ ದ್ರಾವಿಡ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯಕ್ರಮ ಸಂಯೋಜಕ ಗಣೇಶ್ ಪ್ರಸಾದ್ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತುಳು ಭಾಷಿಕ ಆದಿದ್ರಾವಿಡ ಸಮುದಾಯವು ಆದಿದ್ರಾವಿಡ, ಆದಿ ಕರ್ನಾಟಕ, ಹೊಲೆಯ, ಪಾಲೆ, ಕರಾದಿ, ಕಲ್ಲಾದಿ, ಹಸಲರು ಮತ್ತಿತರ ಹಲವು ಹೆಸರುಗಳಲ್ಲಿ ಹಂಚಿ ಹೋಗಿವೆ. ಸತ್ಯಸಾರಮಾಣಿ ಕುಲದೈವ ಎಂದು ಆರಾಧಿಸುವವರನ್ನು ಆದಿದ್ರಾವಿಡರೆಂದು ಪರಿಗಣಿಸಿ, ನಮ್ಮ ಜಾತಿಗೆ ಆದಿದ್ರಾವಿಡ ಎಂಬ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು, ಸಮುದಾಯದ ವಸತಿ, ಉದ್ಯೋಗ, ಸಾಮಾಜಿಕ, ಶೈಕ್ಷಣಿಕ ಮತ್ತು ಜನಪದೀಯ ಬೆಳವಣಿಗೆಗೆ ₹200 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಲಾಗುವುದು’ ಎಂದರು.

24ರಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ, 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್ ಭಾಗವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ ಎಂದರು.

ADVERTISEMENT

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾಸಂಘದ ಅಧ್ಯಕ್ಷ ಶಿವಾನಂದ ಬಳ್ಳಾಲ್‍ಬಾಗ್, ಪ್ರಮುಖರಾದ ರಮೇಶ್ ಉಳ್ಳಾಲ್, ಪ್ರೇಮನಾಥ್ ಪಿ.ಬಿ. ಬಳ್ಳಾಲ್‍ಬಾಗ್, ಸುನಿಲ್ ಕುಮಾರ್ ಬಳ್ಳಾಲ್‍ಬಾಗ್, ಶ್ರೀನಿವಾಸ್ ಆರ್ಬಿಗುಡ್ಡೆ, ಸುನಿಲ್ ಕುಮಾರ್ ಕಂಕನಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.