
ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಠಾಣೆ ಪೊಲೀಸರು ಶುಕ್ರವಾರ ಮೂರನೇ ನೋಟಿಸ್ ಜಾರಿಗೊಳಿಸಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು.
ಶೋಧ ಕಾರ್ಯಾಚರಣೆ ವೇಳೆ ತಿಮರೋಡಿ ಅವರ ಮನೆಯಲ್ಲಿ ಬಂದೂಕು ಮತ್ತು ಎರಡು ಖಡ್ಗ ಪತ್ತೆಯಾಗಿದ್ದು, ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ದೂರು ನೀಡಿದ್ದರು.
ಹಿಂದೆ ಸೆ.21ರಂದು ವಿಚಾರಣೆಗೆ ಬರಲು ಸೂಚಿಸಿದ್ದರು. ಅಂದು ಹಾಜರಾಗದ ಕಾರಣ ಮತ್ತೊಂದು ನೋಟಿಸ್ ಅಂಟಿಸಿ, ಸೆ.25ಕ್ಕೆ ವಿಚಾರಣೆಗೆ ಬರಲು ಸೂಚಿಸಿದ್ದರು. ಆಗಲೂ ಹಾಜರಾಗದ ಕಾರಣ ಈಗ ಮೂರನೇ ನೋಟಿಸ್ ನೀಡಲಾಗಿದೆ. ಸೆಪ್ಟೆಂಬರ್ 29ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ತಿಮರೋಡಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಸೆ.27ಕ್ಕೆ ನಿಗದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.