ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಸಮೀಪ ಬಜತ್ತೂರು ಗ್ರಾಮದ ವಳಾಲುನಲ್ಲಿ ಟೋಲ್ ಪ್ಲಾಜಾ ನಿರ್ಮಾಣವಾಗುತ್ತಿದೆ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ತನಕದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿ ಭರದಿಂದ ಸಾಗಿದ್ದು, ಉಪ್ಪಿನಂಗಡಿ ಸಮೀಪದ ಬಜತ್ತೂರಿನ ವಳಾಲು ಸನಿಹದಲ್ಲಿ ಟೋಲ್ ಪ್ಲಾಜಾ ನಿರ್ಮಾಣ ಆಗುತ್ತಿದೆ.
ಬಿ.ಸಿ.ರೋಡ್ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ಕಾಮಗಾರಿ ಶೇ75ರಷ್ಟು ಈಗಾಗಲೇ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಮಧ್ಯೆ ಟೋಲ್ಗೇಟ್ ನಿರ್ಮಾಣಗೊಳ್ಳುತ್ತಿದೆ. ಇಲ್ಲಿ ಹೆದ್ದಾರಿಯ ಕಾಂಕ್ರಿಟ್ ಕಾಮಗಾರಿ ಪೂರ್ಣಗೊಂಡಿದ್ದು ಟೋಲ್ ಪ್ಲಾಜಾ ಅನುಷ್ಠಾನದ ಕಾರ್ಯ ನಡೆಯುತ್ತಿದೆ. ಶೆಲ್ಟರ್ ಹಾಗೂ ಹೆದ್ದಾರಿಯ ಪಕ್ಕದಲ್ಲೇ ಕಾಂಪ್ಲೆಕ್ಸ್ ಕೂಡ ನಿರ್ಮಾಣಗೊಂಡಿದೆ. ಕಾಮಗಾರಿ ಭರದಿಂದ ನಡೆಯುತ್ತಿದ್ದು ಇನ್ನು ಒಂದೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ ಟೋಲ್ ಸಂಗ್ರಹವೂ ಆರಂಭಗೊಳ್ಳಲಿದೆ.
ಇಕ್ಕಡೆಯಲ್ಲಿ ತಲಾ 2 ರಂತೆ 4 ಲೇನ್: ಬಿ.ಸಿ.ರೋಡು-ಪೆರಿಯಶಾಂತಿ ಮಧ್ಯೆ 46 ಕಿ.ಮೀ. ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆ ಸಂಸ್ಥೆ ಕೆಎನ್ಆರ್ ಕನ್ಸ್ಟ್ರಕ್ಷನ್ ಸಂಸ್ಥೆ ಟೋಲ್ ಪ್ಲಾಜಾ ನಿರ್ಮಾಣದ ಕಾರ್ಯವನ್ನು ನಿರ್ವಹಿಸುತ್ತಿದೆ. ಚತುಷ್ಪಥ ಹೆದ್ದಾರಿಯಲ್ಲಿ ಎರಡೂ ಕಡೆ ತಲಾ ನಾಲ್ಕು ಲೇನ್ಗಳು ಇರಲಿವೆ. ಒಂದೇ ಸಮಯಕ್ಕೆ ಎರಡು ಬದಿ ಒಟ್ಟು 8 ಲೇನ್ಗಳಲ್ಲಿ ವಾಹನ ಸಾಗಲು ಅವಕಾಶ ಸಿಗಲಿದೆ. ದ್ವಿಚಕ್ರ ಹಾಗೂ ರಿಕ್ಷಾಗಳ ಸಂಚಾರಕ್ಕೆ ಎರಡೂ ಬದಿ ಪ್ರತ್ಯೇಕ ಲೇನ್ಗಳು ನಿರ್ಮಾಣ ಮಾಡಲಾಗಿದೆ.
ಏಪ್ರಿಲ್ನಿಂದ ಟೋಲ್ ಸಂಗ್ರಹ ಸಾಧ್ಯತೆ: ಚತುಷ್ಪಥ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು ಮುಂದಿನ ವರ್ಷದ ಮಾರ್ಚ್, ಏಪ್ರಿಲ್ ವೇಳೆಗೆ ಬಜತ್ತೂರು ಟೋಲ್ಗೇಟ್ ಓಪನ್ ಆಗಿ ಟೋಲ್ ಸಂಗ್ರಹವೂ ಆರಂಭವಾಗುವ ಸಾಧ್ಯತೆ ಇದೆ. ಟೋಲ್ ಆರಂಭಗೊಳ್ಳಬೇಕಾದರೆ ಅದಕ್ಕೆ ಪ್ರತ್ಯೇಕ ನೋಟಿಫಿಕೇಶನ್ ಆಗಬೇಕು. ಆ ಬಳಿಕವೇ ಟೋಲ್ ಸಂಗ್ರಹದ ಕಾರ್ಯವನ್ನು ಯಾರು ನಿರ್ವಹಿಸುತ್ತಾರೆ. ಸ್ಥಳೀಯರಿಗೆ ಯಾವ ರೀತಿಯ ಶುಲ್ಕ, ವಿನಾಯಿತಿ ಹೇಗೆ, ಉಳಿದ ವಾಹನಗಳಿಗೆ ಹೇಗೆ ಶುಲ್ಕ ಇರುತ್ತದೆ ಎಂಬುದು ನೋಟಿಫಿಕೇಶನ್ ಪ್ರಕ್ರಿಯೆಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು-ಮಂಗಳೂರು ಮಧ್ಯೆ 7ನೇ ಟೋಲ್ ಪ್ಲಾಜಾ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು-ಮಂಗಳೂರು ಮಧ್ಯೆ ಬೆಂಗಳೂರು ನೆಲಮಂಗಲದಿಂದ ಸಕಲೇಶಪುರ ಮಧ್ಯೆ 5 ಕಡೆ ಟೋಲ್ ಫ್ಲಾಝಾ ಇವೆ. ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರು ಪಂಪ್ವೇಲ್ ಮಧ್ಯೆ ಬಿ.ಸಿ.ರೋಡು ಸಮೀಪ ಬ್ರಹ್ಮರಕೂಟ್ಲುನಲ್ಲಿ ಟೋಲ್ ಫ್ಲಾಝಾ ಇದ್ದು, ವಳಾಲುನಲ್ಲಿ ನಿರ್ಮಾಣವಾಗುತ್ತಿರುವ ಟೋಲ್ ಫ್ಲಾಝಾ 2ನೇಯದ್ದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೆಂಗಳೂರು-ಮಂಗಳೂರು ಮಧ್ಯೆ 7 ಟೋಲ್ ಫ್ಲಾಝಾಗಳಲ್ಲಿ ಶುಲ್ಕ ತೆರಬೇಕಾಗುತ್ತದೆ.
ಟೋಲ್ ಪ್ಲಾಜಾನಿರ್ಮಾಣ ಕಾಮಗಾರಿ ಬಹುತೇಕ ಮುಗಿದಿವೆ. ಒಂದೆರಡು ತಿಂಗಳಲ್ಲಿ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಕಾಮಗಾರಿ ಪೂರ್ಣಗೊಂಡ ಬಳಿಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟೋಲ್ ಪ್ಲಾಜಾ ಹಸ್ತಾಂತರವಾಗಲಿದೆ. ಆ ಬಳಿಕವೇ ಟೋಲ್ ಸಂಗ್ರಹ ನಿರ್ಧಾರವಾಗಲಿದೆ.-ಅನಿಲ್ಕುಮಾರ್ ಸಿಂಗ್, ಮೇಲ್ವಿಚಾರಕ ಕೆಎನ್ಆರ್ ಕನ್ಸ್ಟ್ರಕ್ಷನ್ ಕಂಪೆನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.