ಉಜಿರೆ: ಮಹಿಳೆಯರು, ಮಹಿಳೆಯರಿಂದ ಹಾಗೂ ಮಹಿಳೆಯರಿಗಾಗಿ ವ್ಯವಹಾರ ನಡೆಸುವ ಧರ್ಮಸ್ಥಳ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯು ಲಾಭರಹಿತ ಸಂಸ್ಥೆಯಾಗಿದ್ದು ಮಹಿಳೆಯರಿಗೆ ಸ್ವಾವಲಂಬಿ ಜೀವನ ಅವಕಾಶ ಮಾಡಿಕೊಡುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳದಲ್ಲಿ ಬ್ಯಾಂಕ್ ಆಫ್ ಬರೋಡ ವತಿಯಿಂದ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಗೆಉತ್ಪನ್ನಗಳನ್ನು ಮಾರಾಟ ಮಾಡಲು ಕೊಡುಗೆಯಾಗಿ ನೀಡಿದ ಮಾರುತಿ ಇಕೊ ವಾಹನ ಹಸ್ತಾಂತರ ಸಮಾರಂಭದಲ್ಲಿ ಅವರುಮಾತನಾಡಿದರು. ‘ಸಿರಿ’ ಆಶ್ರಯದಲ್ಲಿ ರಾಜ್ಯದಲ್ಲಿ 4,000 ಮಹಿಳೆಯರು ಹಾಗೂ ಬೆಳ್ತಂಗಡಿ ತಾಲ್ಲೂಕಿನಲ್ಲಿ 1,500 ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು.
ಬ್ಯಾಂಕ್ ಆಫ್ ಬರೋಡದ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹೇಮಾವತಿ ಹೆಗ್ಗಡೆ ಉಪಸ್ಥಿತರಿದ್ದರು.ಬ್ಯಾಂಕ್ ಆಫ್ ಬರೋಡದ ಮಹಾ ಪ್ರಬಂಧಕಿ ಗಾಯತ್ರಿ ಮಾತನಾಡಿ, ವಿಜಯಾ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರಾಗಿ ಹಾಗೂ ಬ್ಯಾಂಕಿನ ಪ್ರಗತಿಯಲ್ಲಿ ಹೆಗ್ಗಡೆಯವರ ಪ್ರೋತ್ಸಾಹ, ಸಹಕಾರಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.
ಬ್ಯಾಂಕ್ ಆಫ್ ಬರೋಡದ ಡಿ.ಜಿ.ಎಂ. ಗೋಪಾಲಕೃಷ್ಣ ಮಾತನಾಡಿದರು. ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ಮಾತನಾಡಿ, ‘ಸಿರಿ ಸಂಸ್ಥೆಯು ಪ್ರತಿ ವರ್ಷ ₹ 30 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸುತ್ತಿದೆ. ಮಹಿಳಾ ಸಬಲೀಕರಣಕ್ಕೆ ಪ್ರೇರಕ ಶಕ್ತಿಯಾಗಿದೆ’ ಎಂದರು.
ರಾಜ್ಯದೆಲ್ಲೆಡೆ ಮೂರು ತಿಂಗಳು ಸಿರಿ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಹಿರಿಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಇದ್ದರು. ಬ್ಯಾಂಕ್ನ ಧರ್ಮಸ್ಥಳ ಶಾಖೆಯ ಪ್ರಬಂಧಕ ವಿಜಯ ಪಾಟೀಲ್ ಸ್ವಾಗತಿಸಿದರು. ವಸಂತಿ ವಂದಿಸಿದರು. ಮಾರುಕಟ್ಟೆ ಪ್ರಬಂಧಕ ಜೀವನ್ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.