ಬಂಟ್ವಾಳ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದು ದುರ್ನಾತ ಬೀರುತ್ತಿದ್ದ ಇಲ್ಲಿನ ಬಿ.ಸಿ.ರೋಡು ಕೈಕುಂಜೆ ರೈಲ್ವೆ ನಿಲ್ದಾಣವು ಅಮೃತ ಭಾರತ್ ಯೋಜನೆಯಡಿ ₹ 28.49 ಕೋಟಿ ವೆಚ್ಚದಲ್ಲಿ ಹೊಸ ವಿನ್ಯಾಸದೊಂದಿಗೆ ಪುನರ್ ನಿರ್ಮಾಣಗೊಂಡಿದೆ.
2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಶಂಕು ಸ್ಥಾಪನೆ ನೆರವೇರಿಸಿದ್ದು, ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ರೈಲು ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈಗಾಗಲೇ ಮೊದಲ ಹಂತದ ಕಾಮಗಾರಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಮುಂದಿನ ಮೂರ್ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಇಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಸೇರಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಶೌಚಾಲಯ, ಕೆಫೆಟೇರಿಯಾ, ನಾಲ್ಕು ಕ್ಯಾಟರಿಂಗ್ ಸ್ಟಾಲ್ ನಿರ್ಮಾಣಗೊಳ್ಳುತ್ತಿದೆ. ಇಲ್ಲಿನ ಕೆಲವೆಡೆ ಗ್ರಾನೈಟ್ ನೆಲಹಾಸು, ಇನ್ನೂ ಕೆಲವೆಡೆ ಕಾಂಕ್ರೀಟು ಮತ್ತು ಟೈಲ್ಸ್ ಅಳವಡಿಸಲಾಗಿದೆ. ಈ ನಿಲ್ದಾಣದ ಉದ್ದಕ್ಕೂ ಸಿಸಿಟಿವಿ ಅಳವಡಿಕೆ, ವೈಫೈ ಸೌಲಭ್ಯ ಒದಗಿಸಲಾಗಿದೆ. ಎಲ್ಇಡಿ ಪರದೆ ಮೂಲಕ ರೈಲು ಸಂಚಾರ ಮತ್ತು ಸಮಯಗಳ ಬಗ್ಗೆ ಮಾಹಿತಿ, ಮುಖ್ಯದ್ವಾರ ವೃತ್ತಾಕಾರವಾಗಿ ವಿನ್ಯಾಸಗೊಳಿಸಿರುವುದು ಗಮನ ಸೆಳೆಯುತ್ತಿದೆ. ಈಗಾಗಲೇ ರೈಲು ನಿಲ್ದಾಣದ ವಿದ್ಯುದೀಕರಣ, ಹಳಿ ದಾಟಲು ಮೇಲ್ಸೇತುವೆ ನಿರ್ಮಾಣಗೊಂಡಿದ್ದು, ಸುರಕ್ಷತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕಿಡಿಗೇಡಿಗಳು ಗಾಂಜಾ ಮಾರಾಟ ಮತ್ತಿತರ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದ್ದು, ಮಹಿಳೆಯರು ಮತ್ತು ಮಕ್ಕಳ ಸುರಕ್ಷಿತ ಪ್ರಯಾಣಕ್ಕೆ ಹೆಚ್ಚಿನ ಬಲ ಬಂದಿದೆ ಎಂಬ ಮಾತು ಸ್ಥಳೀಯರಿಂದ ವ್ಯಕ್ತವಾಗಿದೆ.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಕೈಕುಂಜೆ ರೈಲ್ವೆ ನಿಲ್ದಾಣ ಪುನರ್ ನಿರ್ಮಾಣಗೊಂಡು ಕಂಗೊಳಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.