ಬೆಳ್ತಂಗಡಿ: ‘ಯುವ ಜನಾಂಗ ವಿವಿಧ ಆಕರ್ಷಣೆಗೆ ಒಳಗಾಗಿ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿದೆ’ ಎಂದು ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಶೆಟ್ಟಿ ಹೇಳಿದರು.
ವಾಣಿ ಪದವಿ ಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ರೋವರ್ಸ್ - ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ನಡೆದ ವಿಶ್ವ ತಂಬಾಕು ದಿನ ಹಾಗೂ ವಿಶ್ವ ಮಾದಕ ವಸ್ತು ನಿರ್ಮೂಲನೆ ದಿನದ ಅಂಗವಾಗಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಯುವಕ ಯುವತಿಯರು ಅನಗತ್ಯ ಚಿಂತೆ, ಒತ್ತಡ ನಿವಾರಣೆಯ ನೆಪದಲ್ಲಿ ತಮಗೆ ಅರಿವಿಲ್ಲದೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದು ಹೃದಯ ಸಂಬಂಧಿ ಕಾಯಿಲೆಗಳಿಗೆ ಈಡಾಗುತ್ತಿದ್ದಾರೆ. ವಿದ್ಯಾರ್ಥಿಗಳು ಭವಿಷ್ಯವನ್ನು ಮತ್ತು ಸಮಾಜವನ್ನು ಉತ್ತಮವಾಗಿಸಲು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು. ಸಾರ್ವಜನಿಕರು ಮಾದಕ ದ್ರವ್ಯಗಳ ಅಕ್ರಮ ಸಾಗಣೆ ಬಗ್ಗೆ ಜಾಗೃತರಾಗಬೇಕು’ ಎಂದರು.
ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ.ಅಧ್ಯಕ್ಷತೆ ವಹಿಸಿದ್ದರು. ರೇಂಜರ್ಸ್ ಲೀಡರ್ ರಕ್ಷಾ ಭಾಗವಹಿಸಿದ್ದರು.
ರೆಡ್ ಕ್ರಾಸ್ ಘಟಕದ ಸಂಯೋಜಕಿ ಅನುರಾಧ ಕೆ.ರಾವ್ ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ವಂದಿಸಿದರು. ನಿಶ್ಮಿತಾ ಕೆ.ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.