ADVERTISEMENT

ಲಾಕ್‌ಡೌನ್‌ನಲ್ಲೂ ಕಾಂಗ್ರೆಸ್‌ನಿಂದ ರಾಜಕೀಯ: ಸುದರ್ಶನ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 19 ಮೇ 2020, 14:52 IST
Last Updated 19 ಮೇ 2020, 14:52 IST
ಸುದರ್ಶನ ಎಂ.
ಸುದರ್ಶನ ಎಂ.   

ಮಂಗಳೂರು: ಲಾಕ್‌ಡೌನ್‌ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ಹಲವೆಡೆ ಒಟ್ಟು 2.70 ಲಕ್ಷ ಆಹಾರ ಸಾಮಗ್ರಿ ಕಿಟ್‌ಗಳನ್ನು ವಿತರಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಮಾನಾಥ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರು ತಮ್ಮ ವೋಟ್‌ ಬ್ಯಾಂಕ್‌ ಅನ್ನು ಗಮನದಲ್ಲಿರಿಸಿಕೊಂಡು ಆಯ್ದ ಜನರಿಗೆ ಮಾತ್ರ ಕಿಟ್‌ ವಿತರಣೆ ಮಾಡಿದ್ದಾರೆ. ಆದರೆ, ಬಿಜೆಪಿ ಯಾವುದೇ ಜಾತಿ, ಧರ್ಮ ನೋಡದೇ, ಅರ್ಹರಿಗೆ ಕಿಟ್‌ ವಿತರಿಸಿದೆ. ಯು.ಟಿ. ಖಾದರ್ ಅವರು ಪ್ರತಿನಿಧಿಸುವ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 25 ಸಾವಿರ ಕುಟುಂಬಗಳಿಗೂ ಬಿಜೆಪಿ ವತಿಯಿಂದ ಕಿಟ್‌ ನೀಡಲಾಗಿದೆ ಎಂದರು.

ವಿವಿಧ ಕಡೆಗಳಲ್ಲಿ ಉಳಿದುಕೊಂಡಿದ್ದ 10 ಸಾವಿರ ವಲಸೆ ಕಾರ್ಮಿಕರಿಗೆ ನಿತ್ಯ ಆಹಾರವನ್ನು ಒದಗಿಸಲಾಗಿದೆ. ಅಲ್ಲದೇ ಏಳು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಲಸೆ ಕಾರ್ಮಿಕರಿಗೆ 3,62,492 ಆಹಾರದ ಪೊಟ್ಟಣಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ADVERTISEMENT

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ 1.70 ಲಕ್ಷ ಮುಖಗವಸು ತಯಾರಿಸಿ, ವಿತರಿಸಲಾಗಿದೆ. ಔಷಧಿ ಹಾಗೂ ತುರ್ತು ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆ ಕೋರಿ ಬಂದ 63 ಸಾವಿರ ಮನವಿಗೆ ಸ್ಪಂದಿಸಲಾಗಿದೆ. ಸಂಸದ ನಳಿನ್‌ಕುಮಾರ್ ಕಟೀಲ್‌ ಅವರು ಆರಂಭದಲ್ಲಿಯೇ ವಾರ್‌ರೂಂ ಆರಂಭಿಸಿದ್ದು, ಅಲ್ಲಿ ಸ್ಥಾಪಿಸಿದ್ದ ಸಹಾಯವಾಣಿಗೆ ಬಂದ ಕರೆಗಳಿಗೆ ಅನುಗುಣವಾಗಿ ಬಿಜೆಪಿ ಕಾರ್ಯಕರ್ತರು ಸೇವೆ ಒದಗಿಸಿದ್ದಾರೆ ಎಂದು ಹೇಳಿದರು.

ಲಾಕ್‌ಡೌನ್‌ ಸಂದರ್ಭವನ್ನೂ ಕಾಂಗ್ರೆಸ್ಸಿಗರು ರಾಜಕೀಯಕ್ಕೆ ಬಳಸಿಕೊಂಡಿದ್ದು, ವಲಸೆ ಕಾರ್ಮಿಕರನ್ನು ಕರೆತಂದು ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.