ಮಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ ಎರಡು ಸಮಾವೇಶ ನಡೆಸಲಾಗುವುದು. 3–4 ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಂದು ಸಮಾವೇಶ ಆಯೋಜಿಸಲಾಗಿದೆ. ಬಿಜೆಪಿ ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರ ಹಾಗೂ ಮಂಡಲ ಸಮಿತಿಯ ಪ್ರಮುಖರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇದೇ 27ರಿಂದ ಡಿ.3ರವರೆಗೆ ಪ್ರವಾಸ ಮಾಡಲು ಸಚಿವರು ಹಾಗೂ ಹಿರಿಯ ನಾಯಕರನ್ನು ಒಳಗೊಂಡ 6 ತಂಡಗಳನ್ನು ರಚಿಸಲಾಗಿದೆ ಎಂದ ಅವರು, ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಒಳಗೊಂಡ ತಂಡ ಉಡುಪಿ ಜಿಲ್ಲೆಯಿಂದ ಪ್ರವಾಸ ಆರಂಭಿಸಲಿದೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ, ಮಂಗಳೂರು, ಮೂಡುಬಿದಿರೆ ಮತ್ತು ಬಂಟ್ವಾಳ ಕ್ಷೇತ್ರಗಳ ಸಮಾವೇಶ ಬಂಟ್ವಾಳದಲ್ಲಿ, ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳ ಸಮಾವೇಶ ಉಪ್ಪಿನಂಗಡಿಯಲ್ಲಿ ನಡೆಯಲಿದ್ದು, ಶೀಘ್ರ ದಿನಾಂಕ ನಿಗದಿಯಾಗಲಿದೆ. ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಪ್ರತಿ ಸಮಾವೇಶದಲ್ಲಿ ಸುಮಾರು 400 ಮಂದಿ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಿಟ್ಟಿನಲ್ಲಿ ಪ್ರತಿ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶೇ 60ರಷ್ಟು ಪಂಚಾಯಿತಿಯಲ್ಲಿ ಪೂರ್ಣಗೊಂಡಿದೆ. ಪ್ರತಿ ಪಂಚಾಯಿತಿಯಲ್ಲಿ ಪಕ್ಷದ ಒಬ್ಬ ಬೂತ್ ಮಟ್ಟದ ಅಧಿಕಾರಿ ಸೇರಿದಂತೆ ಪರಿಶಿಷ್ಟ ಜಾತಿ, ಪಂಗಡ, ಮಹಿಳೆ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಒಳಗೊಂಡ 5 ಮಂದಿಯ ‘ಪಂಚರತ್ನ’ ತಂಡ ರಚಿಸಿದ್ದೇವೆ. ಶೇ 70ರಷ್ಟು ಬೂತ್ಗಳಲ್ಲಿ ಈಗಾಗಲೇ ‘ಪಂಚರತ್ನ’ ತಂಡ ರಚನೆಯಾಗಿದೆ. ಪೇಜ್ ಪ್ರಮುಖ್ರನ್ನು ಸಕ್ರಿಯಗೊಳಿಸಲಾಗಿದ್ದು, ಒಬ್ಬ ಪೇಜ್ ಪ್ರಮುಖ್ಗೆ 30 ಮತದಾರರ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.