ADVERTISEMENT

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಆದ್ಯತೆ: ನೆ.ಲ. ನರೇಂದ್ರಬಾಬು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 15:39 IST
Last Updated 17 ಆಗಸ್ಟ್ 2021, 15:39 IST

ಮಂಗಳೂರು: ದೇಶದಲ್ಲಿ ಬಿಜೆಪಿ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ದೊರೆತಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರಬಾಬು ಹೇಳಿದರು.

ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಮಂಗಳವಾರ ನಗರಕ್ಕೆ ಭೇಟಿ ನೀಡಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ದೇಶದಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಮಹತ್ತರವಾದ ಬದಲಾವಣೆಗಳಾಗಿವೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ, ಹೆಚ್ಚು ಶಕ್ತಿ ನೀಡುವ ಕೆಲಸ ಆಗಿರುವುದರಿಂದ ಈ ವರ್ಗಗಳ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ’ ಎಂದರು.

ಪ್ರಧಾನಿ ನರೇಂದ್ರ ಮೋದಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಧ್ಯೇಯದೊಂದಿಗೆ ಎಲ್ಲ ವರ್ಗಗಳ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ಬಿಜೆಪಿ ಹಿಂದುಳಿದ ವರ್ಗಗಳಿಗೆ ವಿಶೇಷ ಆದ್ಯತೆ ನೀಡಿರುವುದರಿಂದ ಕೇಂದ್ರದಲ್ಲಿ 27 ಸಚಿವರು, ಮೂರು ಮಂದಿ ರಾಜ್ಯಪಾಲರು, ರಾಜ್ಯದಲ್ಲಿ 7 ಸಚಿವರು ಆಯ್ಕೆ ಆಗುವಂತಾಗಿದೆ. ರಾಜ್ಯದಲ್ಲಿ 3.5 ಕೋಟಿಯಷ್ಟು ಹಿಂದುಳಿದ ವರ್ಗಗಳ ಜನರಿದ್ದಾರೆ ಎಂದರು.

ADVERTISEMENT

ಹಿಂದುಳಿದ ವರ್ಗದ ಮಂದಿ ಶಿಕ್ಷಣ ವಂಚಿತರಾಗದಂತೆ ವಿಶೇಷ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೀಸಲಾತಿಯನ್ನೂ ಒದಗಿಸಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದು ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಉಪಾಧ್ಯಕ್ಷ ಅಶೋಕ್, ಕಾರ್ಯದರ್ಶಿ ವಿಠಲ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ನಾರಾಯಣ, ಜಿಲ್ಲಾ ಪ್ರಭಾರಿ ಭರತ್ ಕುಮಾರ್ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.