ADVERTISEMENT

ಉಳ್ಳಾಲ: ತಲಪಾಡಿ ಗಡಿಯಲ್ಲಿ ತಪಾಸಣೆ ತೀವ್ರ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 3:21 IST
Last Updated 8 ಆಗಸ್ಟ್ 2021, 3:21 IST
ಗಡಿಭಾಗ ತಲಪಾಡಿಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದರು.
ಗಡಿಭಾಗ ತಲಪಾಡಿಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದರು.   

ಉಳ್ಳಾಲ: ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ತಪಾಸಣೆಯನ್ನು ತೀವ್ರಗೊಳಿಸಲಾಗಿತ್ತು. ಅನವಶ್ಯಕವಾಗಿ ಕೇರಳದಿಂದ ಬರುವ ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ.

ಮಂಗಳೂರು ಪೊಲೀಸ್‌ ಕಮಿಷನರ್ ಎನ್.ಶಶಿಕುಮಾರ್ ಬೆಳಿಗ್ಗೆ ಭೇಟಿ ನೀಡಿ ತಪಾಸಣೆ ನಡೆಸಿದರು.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಗಡಿಭಾಗದ 18 ಕಡೆಗಳಲ್ಲಿ ಚೆಕ್‌ಪೋಸ್ಟ್‌ ಮಾಡಿ, ಕಾರ್ಯಾಚರಣೆ ನಡೆಸಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ 24 ಗಂಟೆ ಕಾರ್ಯ ನಿರ್ವಹಿಸುತ್ತಾರೆ. ಗಡಿಭಾಗದಲ್ಲಿ ಪ್ರವಾಸ, ನೆಂಟರ ಮನೆಗೆ ಹೋಗುವವರು, ಅನಗತ್ಯವಾಗಿ ತಿರುಗಾಡಿದ ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ವೈದ್ಯಕೀಯ ತುರ್ತು ಹಾಗೂ ಕೆಲಸದ ಮೇಲೆ ಬರುವವರ ಆರ್‌ಟಿಪಿಸಿಆರ್ ವರದಿ ಪರಿಶೀಲಿಸಿ ಕಳುಹಿಸಲಾಗುತ್ತಿದೆ’ ಎಂದರು.

ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಬಂಡಾರ್, ಉಳ್ಳಾಲ ಠಾಣಾಧಿಕಾರಿ ಸಂದೀಪ್ ಇದ್ದರು.

ADVERTISEMENT

ಶಾಸಕ ಯು.ಟಿ ಖಾದರ್ ಅಸಮಾಧಾನ: ಗಡಿಭಾಗ ತಲಪಾಡಿಗೆ ಭೇಟಿ ನೀಡಿದ ಶಾಸಕ ಯು.ಟಿ ಖಾದರ್, ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೋವಿಡ್ ನಿಯಂತ್ರಣ ವಿಚಾರದಲ್ಲಿ ಜನರು ಸಹಕಾರ ನೀಡುತ್ತಿದ್ದರೆ, ರಾಜ್ಯ ಸರ್ಕಾರ ಅದನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಸರ್ಕಾರ ಕೈಗೊಂಡ ಕ್ರಮದಿಂದಗಡಿ ಪ್ರದೇಶದಲ್ಲಿ ತೊಂದರೆಯಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.