ADVERTISEMENT

ರಜತ ಸಂಭ್ರಮ ಕಟೌಟ್‌: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 11:35 IST
Last Updated 23 ಜನವರಿ 2019, 11:35 IST

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌. ರಾಜೇಂದ್ರಕುಮಾರ್‌ ಅವರ ರಜತ ಸಂಭ್ರಮ ಹಾಗೂ ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾರಂಭಕ್ಕಾಗಿ ನಗರದ ಹಲವೆಡೆ ಕಟೌಟ್‌ಗಳನ್ನು ಅಳವಡಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಾರಂಭದ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಜಂಕ್ಷನ್‌ಗಳು, ಜನರು ನಡೆದಾಡುವ ಸ್ಥಳಗಳು ಹಾಗೂ ರಸ್ತೆ ವಿಭಜಕಗಳಿಗೆ ಕಟೌಟ್‌ಗಳನ್ನು ಅಳವಡಿಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಹಾನಗರ ಪಾಲಿಕೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತ್ರಾಯ ತಿಳಿಸಿದ್ದಾರೆ.

ADVERTISEMENT

ಅಲ್ಲದೇ ಮೆರವಣಿಗೆಯ ಸಂದರ್ಭದಲ್ಲಿ ವಾಹನಗಳ ಸಂಚಾರ ಹಾಗೂ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರ ಓಡಾಟಕ್ಕೆ ಅಡಚಣೆ ಉಂಟು ಮಾಡಿದ್ದು ಹಾಗೂ ಸಮಾರಂಭಕ್ಕೆ ಬಂದ ವಾಹನಗಳ ಅಸಮರ್ಪಕ ಪಾರ್ಕಿಂಗ್‌ಗಾಗಿ ಮಂಗಳೂರು ಪೂರ್ವ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.