
ಬಂಧನ (ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲ್ಲೂಕಿನ ನರಿಮೊಗರು ಗ್ರಾಮದ ಗಡಪಿಲ ಎಂಬಲ್ಲಿ ಮಂಜೇಶ್ವರ- ಸುಬ್ರಹ್ಮಣ್ಯ ಅಂತರರಾಜ್ಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ವಾಹನ ಕೆಟ್ಟು ಹೋಗಿದ್ದ ಕಾರಣ 5 ಜಾನುವಾರುಗಳನ್ನು ರಸ್ತೆ ಬದಿಯಲ್ಲೇ ಬಿಟ್ಟು ಹೋಗಿದ್ದ ಅಕ್ರಮ ಗೋವು ಸಾಗಾಟದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಸಜಿಪನಡು ನಿವಾಸಿಗಳಾದ ಅಬ್ದುಲ್ ಲತೀಫ್, ಆಶೀಕ್ ಪಾಷಾ ಆರೋಪಿಗಳು.
ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದಾಗ ವಾಹನ ಕೆಟ್ಟು ಹೋಗಿದ್ದರಿಂದ ಆರೋಪಿಗಳು ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾಗಿದ್ದರು. ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದ 5 ಜಾನುವಾರುಗಳ ಬಗ್ಗೆ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಪುತ್ತೂರು ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಸಾಗಿಸಿ ರಕ್ಷಿಸಿದ್ದರು.
ಪ್ರಕರಣವನ್ನು ಖಂಡಿಸಿದ್ದ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಮುಖಂಡರು ತಕ್ಷಣ ಆರೋಪಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಆರೋಪಿಗಳನ್ನು ಪತ್ತೆಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪುತ್ತೂರು ಪೊಲೀಸ್ ವೃತ್ತ ನಿರೀಕ್ಷಕ ಜಾನ್ಸನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಎಸ್ಐ ಸೇಸಮ್ಮ ಮತ್ತು ಅಪರಾಧ ವಿಭಾಗದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.