ADVERTISEMENT

ಶನಿವಾರ ಸಿಬಿಐ ತಂಡ ನಗರಕ್ಕೆ

ವಂಚಕ ಸ್ಯಾಮ್‌ ಪೀಟರ್‌ ವಿಚಾರಣೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2019, 9:22 IST
Last Updated 22 ಆಗಸ್ಟ್ 2019, 9:22 IST

ಮಂಗಳೂರು: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಂತರರಾಜ್ಯ ಮಟ್ಟದ ವಂಚಕ ಸ್ಯಾಮ್‌ ಪೀಟರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ ಅಧಿಕಾರಿಗಳ ತಂಡ ಶನಿವಾರ ನಗರಕ್ಕೆ ಬರಲಿದೆ.

ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸ್ಯಾಮ್‌ ಪೀಟರ್‌, 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕೆ ರೆಡ್‌ ಕಾರ್ನರ್ ನೋಟಿಸ್‌ ಹೊರಡಿಸಲಾಗಿತ್ತು. ನಗರದಲ್ಲಿ ಶುಕ್ರವಾರ ಸುಲಿಗೆಗೆ ಹೊಂಚು ಹಾಕುತ್ತಿದ್ದಾಗ ಮಂಗಳೂರು ಪೂರ್ವ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದರು. ಈ ಕುರಿತು ನಗರ ಪೊಲೀಸರು ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಸಿಬಿಐ ಅಧಿಕಾರಿಗಳ ತಂಡವೊಂದು ಶನಿವಾರ ಮಂಗಳೂರು ತಲುಪಲಿದೆ ಎಂದು ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಂಗಳೂರು ನಗರ ‍ಪೊಲೀಸ್‌ ಕಮಿಷನರೇಟ್‌ನ ಹಿರಿಯ ಅಧಿಕಾರಿಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಮತ್ತೆ ವಶಕ್ಕೆ ಕೋರಿಕೆ: ಸ್ಯಾಮ್‌ ಪೀಟರ್‌ ಮತ್ತು ಆತನ ಜೊತೆಗಿದ್ದ ಏಳು ಮಂದಿಯನ್ನು ಗುರುವಾರದವರೆಗೂ ಪೊಲೀಸ್‌ ವಶಕ್ಕೆ ನೀಡಲಾಗಿತ್ತು. ಗುರುವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಹೆಚ್ಚಿನ ವಿಚಾರಣೆಗಾಗಿ ಇನ್ನಷ್ಟು ದಿನ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಮಂಗಳೂರು ಪೂರ್ವ (ಕದ್ರಿ) ಠಾಣೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ಮತ್ತು ತನಿಖಾ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿಗಳಿಗೆ ತಂಗಲು ಕೊಠಡಿ ನೀಡಿದ್ದ ಲಾಡ್ಜ್‌ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.