ADVERTISEMENT

ಮಂಗಳೂರು | ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 4:51 IST
Last Updated 23 ಜುಲೈ 2025, 4:51 IST
ಮೊಹಮ್ಮದ್ ಅಬ್ದುಲ್ ಫಯಾನ್
ಮೊಹಮ್ಮದ್ ಅಬ್ದುಲ್ ಫಯಾನ್   

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ವಿಚಾರಣೆ ಸಮಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದು, ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.‌

ಮಂಜನಾಡಿ ಕಲ್ಕಟ್ಟ ಬದ್ರಿಯ ನಗರದ ಮೊಹಮ್ಮದ್ ಅಬ್ದುಲ್ ಫಯಾನ್ (27) ಬಂಧಿತ ಆರೋಪಿ.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಈತನು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ಜಿಲ್ಲೆಯ ಬಂಟ್ವಾಳ ನಗರ ಮತ್ತು ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರ ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರ್ಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನ್ಯಾಯಾಂಗ ಬಂಧನದಲ್ಲಿದ್ದಾಗ ಕಾರಾಗೃಹದಲ್ಲಿ ಇತರ ಕೈದಿಗಳ ಮೇಲೆ ಹಲ್ಲೆ ನಡೆಸಿರುವುದಲ್ಲದೆ ಜೈಲು ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣದಲ್ಲಿ ಈತ ಆರೋಪಿ. ಈತನ ವಿರುದ್ಧ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 24 ವಾರಂಟ್ ಇವೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.