ADVERTISEMENT

ಯುಪಿಎಸ್ಸಿ: ಪರಿಶಿಷ್ಟರಿಗೆ ಉಚಿತ ತರಬೇತಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 15:38 IST
Last Updated 26 ನವೆಂಬರ್ 2021, 15:38 IST
ಕುಕ್ಕೆ ಕ್ಷೇತ್ರಕ್ಕೆ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಭೇಟಿ ನೀಡಿದರು. ಮೋಹನರಾಂ ಸುಳ್ಳಿ, ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಶೋಭಾ ಗಿರಿಧರ್ ಇದ್ದರು.
ಕುಕ್ಕೆ ಕ್ಷೇತ್ರಕ್ಕೆ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಭೇಟಿ ನೀಡಿದರು. ಮೋಹನರಾಂ ಸುಳ್ಳಿ, ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಶೋಭಾ ಗಿರಿಧರ್ ಇದ್ದರು.   

ಸುಬ್ರಹ್ಮಣ್ಯ: ಪರಿಶಿಷ್ಟ ಜಾತಿ, ಹಿಂದುಳಿದ ವರ್ಗದವರಿಗೆ ಯುಪಿಎಸ್ಸಿ ಪರೀಕ್ಷೆ ತಯಾರಿ ಸಂಬಂಧ ಉಚಿತ ತರಬೇತಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದಿಂದ ಎಲ್ಲ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಸ್.ಟಿ ಅಭಿವೃದ್ಧಿ ನಿಗಮದಲ್ಲಿ ಹಿಂದುಳಿದ ವರ್ಗದವರಿಗೆ ನೀಡುವ ಸಾಲದ ಬಡ್ಡಿಯನ್ನು ಕಡಿಮೆ ಮಾಡಲು ಸರ್ಕಾರ ಮಟ್ಟದಲ್ಲಿ ಅನುಮತಿ ದೊರೆತಿದೆ. ಹಿಂದುಳಿದ ವರ್ಗದವರಿಗೆ ಸಣ್ಣ ಕೈಗಾರಿಕೆ ಸ್ಥಾಪನೆ, ಸ್ವ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆ ಶೀಘ್ರ ಜಾರಿಯಾಗಲಿದೆ. ಪರಿಶಿಷ್ಟರಿಗೆ ಗಂಗಾ ಕಲ್ಯಾಣ ಯೋಜನೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

ರಾಜ್ಯದಲ್ಲಿ ಪರ್ಸೆಂಟೇಜ್ ಸರ್ಕಾರ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ಆರೋಪದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ, ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ದೇಶದ ಸಂಪತ್ತಾಗಿರುವ ತೆರಿಗೆ ಹಣ ಪೋಲಾಗಬಾರದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ADVERTISEMENT

ವಿಧಾನ ಪರಿಷತ್ ಚುನಾವಣೆಯಲ್ಲಿ 17ರಿಂದ 18 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ದೇಶದ ಅಭಿವೃದ್ಧಿ ಪರವಾದ ಆಡಳಿತ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ನೀಡುತ್ತಿರುವ ಪ್ರಾಮಾಣಿಕ ಆಡಳಿತದಿಂದಾಗಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಪ ಸಂಸ್ಕಾರ ಸೇವೆ: ನಾರಾಯಣ ಸ್ವಾಮಿ ಅವರು ಶುಕ್ರವಾರ ಕುಕ್ಕೆ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನಡೆಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಪಿಜಿಎಸ್ಎನ್ ಪ್ರಸಾದ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಮನೋಜ್ ಸುಬ್ರಹ್ಮಣ್ಯ, ಚಂದ್ರಶೇಖರ ನಲ್ಲೂರಾಯ, ಎಸ್‌ಎಸ್‌ ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್, ಕೆ.ಎಸ್.ಎಸ್ ಕಾಲೇಜು ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್, ಪ್ರಮುಖರಾದ ರಾಜೇಶ್ ಎನ್.ಎಸ್, ಗಿರಿಧರ ಸ್ಕಂಧ, ಪ್ರಸಾದ್.ಕೆ.ರೈ ಕುಮಾರಧಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.