ADVERTISEMENT

ದಕ್ಷಿಣ ಕನ್ನಡ: ಮುಖ್ಯಮಂತ್ರಿ ಜಿಲ್ಲಾ ಪ್ರವಾಸ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2022, 15:42 IST
Last Updated 25 ಏಪ್ರಿಲ್ 2022, 15:42 IST
   

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ.27ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಅವರು ಮಧ್ಯಾಹ್ನ 12 ಗಂಟೆಗೆ ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡ ಉದ್ಘಾಟಿಸುವರು. 12.30ಕ್ಕೆ ಜೈನ ಬಸದಿಗೆ ಭೇಟಿ ನೀಡುವರು. 1 ಗಂಟೆಗೆ ಮೂಡುಬಿದಿರೆ ಪ್ರೆಸ್‍ಕ್ಲಬ್ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು.

ಮಧ್ಯಾಹ್ನ 3ಗಂಟೆಗೆ ಆಡಳಿತ ಸೌಧದ ಮುಂಭಾಗದಲ್ಲಿ ಮೂಲ್ಕಿ- ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗುವರು. ಸಂಜೆ 6 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ವಸತಿ ಸಚಿವರ ಪ್ರವಾಸ ನಾಳೆ

ADVERTISEMENT

ಮಂಗಳೂರು: ರಾಜ್ಯದ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಏ.27 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮೂಡುಬಿದಿರೆಯ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮೂಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಆಕ್ಷೇಪಣೆಗಳಿಗೆ ಆಹ್ವಾನ

ಮಂಗಳೂರು: ಉಪನೋಂದಣಾಧಿಕಾರಿ ಮಂಗಳೂರು ತಾಲ್ಲೂಕು ಕಚೇರಿ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಪಟ್ಟಿಯಲ್ಲಿ ಈಗಾಗಲೇ ನಮೂದಿಸದ ಹೊಸ ಹಾಗೂ ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ಗುರುತಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಯಾವುದೇ ಆಕ್ಷೇಪಣೆಗಳಿದ್ದಲ್ಲಿ ದಾಖಲಾತಿಗಳೊಂದಿಗೆ 15 ದಿನದೊಳಗೆ ಆಕ್ಷೇಪಣೆಯನ್ನು ಉಪನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಆಹ್ವಾನ

ಮಂಗಳೂರು: 2021-22ನೇ ಸಾಲಿನ ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ರೈತರ ಗುರುತಿನ ಸಂಖ್ಯೆ ಹೊಂದಿದ ಮಕ್ಕಳು ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಚೇರಿ ವಿಳಾಸ ಬದಲಾವಣೆ

ಮಂಗಳೂರು: ಹಾಸನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ಕಚೇರಿ ವಿಳಾಸ ಬದಲಾಗಿದೆ. ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ ಕಾರ್ಯಾಲಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಹೆ-75, ಹಾಸನ – ಇದು ಹೊಸ ವಿಳಾಸವಾಗಿದ್ದು, ಇನ್ನುಮುಂದೆ ಈ ಕಚೇರಿಗೆ ಪತ್ರಗಳನ್ನು ಕಳುಹಿಸಲು ಹಾಸನ-ಬಿ.ಸಿ.ರೋಡ್ ವಿಭಾಗದ ವಿಶೇಷ ಭೂಸ್ವಾಧೀನಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.