
ಜಿ. ಪರಮೇಶ್ವರ
ಮಂಗಳೂರು: ‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಮಧ್ಯಂತರ ವರದಿಯನ್ನು ಈಗಾಗಲೇ ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು. ಅಂತಿಮ ವರದಿಯನ್ನು ಆದಷ್ಟು ಬೇಗ ಸಲ್ಲಿಸುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ಅಂತಿಮ ವರದಿ ಸಲ್ಲಿಕೆಯಾದ ಬಳಿಕ ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಲಿದ್ದೇನೆ’ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು.
ನಗರದಲ್ಲಿ ಪೊಲೀಸ್ ವಸತಿ ಸಮುಚ್ಚಯಕ್ಕೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
‘ಕರಾವಳಿಯಲ್ಲಿ ಕೋಮು ಹಿಂಸಾಚಾರ ಮತ್ತು ಧಾರ್ಮಿಕ ಧ್ರುವೀಕರಣದ ಘಟನೆಗಳು ನಡೆಯುತ್ತಿರುವುದರಿಂದ ಇಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕಂಪನಿಗಳು ಹೂಡಿಕೆಗೆ ಹಿಂದೇಟು ಹಾಕುತ್ತಿವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ತಿಳಿಯದು. ಈ ಹಿಂದೆ ಕರಾವಳಿಯಲ್ಲಿ ಅಂತಹ ವಾತಾವರಣ ಇದ್ದುದು ಸತ್ಯ. ಈಗ ಅದು ಬದಲಾಗಿರುವುದು ಸತ್ಯ. ನಾನು ಅಧಿಕೃತವಾಗಿ ಅಂಕಿ ಅಂಶಗಳ ಆಧಾರದಲ್ಲಿ ಈ ಮಾತನ್ನು ಹೇಳುತ್ತೇನೆ. ಕರಾವಳಿಯಲ್ಲಿ ಕೋಮು ದ್ವೇಷದ ಕೊಲೆಗಳು ಕಡಿಮೆ ಆಗಿವೆ. ಡ್ರಗ್ಸ್ ದಂಧೆ ಕಡಿಮೆ ಆಗಿದೆ. ಇಲ್ಲಿ ಶಾಂತಿ ಸ್ಥಾಪನೆಯಾಗುತ್ತಿರುವುದರ ಸೂಚನೆ ಇದು’ ಎಂದರು.
ಶಾಸಕರ ವಿದೇಶಿ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಗೃಹಸಚಿವ, ‘ಅದು ಅವರ ವೈಯಕ್ತಿಕ ನಿರ್ಧಾರ. ಅವರ ಹಣದಲ್ಲಿ ಎಲ್ಲಿಗೆ ಬೇಕಾದರೂ ಹೋಗಬಹುದು. ಅವರದು ಅಧ್ಯಯನ ಪ್ರವಾಸವೂ ಆಗಿರಬಹುದು. ಅದನ್ನು ತಪ್ಪು ಎನ್ನಲಾಗದು. ಬಜೆಟ್ ತಯಾರಿಸುವುದು ಮುಖ್ಯಮಂತ್ರಿ ಮತ್ತು ಹಣಕಾಸು ಇಲಾಖೆ ಅಧಿಕಾರಿಗಳು. ಬಜೆಟ್ಗೆ ಸಂಬಂಧಿಸಿ ಶಾಸಕರು ಏನು ಹೇಳಬೇಕಿತ್ತೋ ಅದನ್ನೆಲ್ಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ದಲಿತ ಮುಖ್ಯಮಂತ್ರಿ ಕುರಿತ ಚರ್ಚೆಯೇ ಇಲ್ಲ. ನಾವೀಗ ಆಡಳಿತದ ಮೇಲೆ ಗಮನ ಕೇಂದ್ರೀಕರಿಸಬೇಕಾಗಿದೆ‘ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.