ADVERTISEMENT

ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 6:19 IST
Last Updated 22 ಜನವರಿ 2026, 6:19 IST
ಮಾನವ ಬಂಧಿತ್ವ ವೇದಿಕೆಯ ಪುತ್ತೂರು ತಾಲ್ಲೂಕು ಸಮಿತಿ ಪದಾಧಿಕಾರಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದರು
ಮಾನವ ಬಂಧಿತ್ವ ವೇದಿಕೆಯ ಪುತ್ತೂರು ತಾಲ್ಲೂಕು ಸಮಿತಿ ಪದಾಧಿಕಾರಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದರು   

ಪುತ್ತೂರು: ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾನವ ಬಂಧಿತ್ವ ವೇದಿಕೆಯ ಪುತ್ತೂರು ತಾಲ್ಲೂಕು ಸಮಿತಿ ಪದಾಧಿಕಾರಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.

ಪುತ್ತೂರಿನ ವಿವೇಕಾನಂದ ಕಾಲೇಜು ಆವರಣದಲ್ಲಿ ಜ.12ರಂದು ನಡೆದಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪೋಷಕರು ಹಾಗೂ ಹದಿಹರೆಯದ ಬಾಲಕ ಬಾಲಕಿಯರು ಭಾಗವಹಿಸಿದ್ದ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ. ವಿಕಸನ ಟಿವಿ ಎಂಬ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಕಾರ್ಯಕ್ರಮದ ವಿಡಿಯೊ ಪ್ರಸಾರ ಮಾಡಲಾಗಿದೆ. 

ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗವನ್ನು ನಿಂದನೆ ಮಾಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮಧ್ಯೆ ದ್ವೇಷ ಉಂಟು ಮಾಡುವ ಮಾತುಗಳನ್ನಾಡಿದ್ದಾರೆ. ದ್ವೇಷ ಭಾಷಣ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದರೂ ಅದನ್ನು ಉಲ್ಲಂಘಿಸಿ ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಹಿಂಸೆಯನ್ನು ಪ್ರೇರೇಪಿಸುವ ಕೆಲಸ ಮಾಡಿದ್ದಾರೆ. ಹಾಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಯೂಟ್ಯೂಬ್ ಚಾನಲ್ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲ್ಲೂಕು ಸಮಿತಿಯ ಪ್ರಧಾನ ಸಂಚಾಲಕ ಅಮಲ ರಾಮಚಂದ್ರ ಕೆ ದೂರು ನೀಡಿದ್ದಾರೆ. 

ADVERTISEMENT

ಎಂ.ಬಿ.ವಿಶ್ವನಾಥ ರೈ, ಮೌರಿಸ್ ಮಸ್ಕರೇನಸ್, ಎಚ್.ಮಹಮ್ಮದ್ ಆಲಿ, ಕೆನ್ಯೂಟ್ ಮಸ್ಕರೇನ್ಹಸ್, ಡಾ.ರಾಜಾರಾಮ್ ಕೆ.ಬಿ, ಬೋಳೋಡಿ ಚಂದ್ರಹಾಸ ರೈ, ಶಶಿಕಿರಣ್ ರೈ, ಅಬ್ದುಲ್ ರೆಹಮಾನ್ ಯೂನಿಕ್, ಉಲ್ಲಾಸ್ ಕೋಟ್ಯಾನ್, ಪ್ರಕಾಶ್ ಗೌಡ ತೆಂಕಿಲ ಈ ವೇಳೆ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.