ADVERTISEMENT

ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 4:27 IST
Last Updated 8 ಜೂನ್ 2021, 4:27 IST
ತೈಲ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ತೈಲ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.   

ಮಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ನಗರದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೋಟ್ ಬ್ಯಾನ್, ಜಿಎಸ್‌ಟಿಯಂತಹ ಕಾನೂನು ಜಾರಿಗೆ ತಂದು ಜನರನ್ನು ಸಂಕಷ್ಟಕ್ಕೆ ದೂಡಿದೆ. ಇದುವರೆಗೆ ಸರ್ಕಾರ ಅಭಿವೃದ್ಧಿಪರ, ಜನಪರ ಕಾರ್ಯಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ಯುಪಿಎ ಸರ್ಕಾರ ಇದ್ದಾಗ ಪೆಟ್ರೋಲ್-ಡೀಸೆಲ್ ದರ ₹70 ಇದ್ದು, ಆಗ ವಿದೇಶದಲ್ಲಿ ಕಚ್ಚಾತೈಲ ದರ 145 ಡಾಲರ್ ಇತ್ತು. ಈಗ ಕಚ್ಚಾತೈಲ ದರ 45 ಡಾಲರ್ ಇದ್ದರೂ, ಪೆಟ್ರೋಲ್‌ ಬೆಲೆ ₹100 ಸಮೀಪಿಸಿದೆ. ಬೆಲೆ ಏರಿಕೆಯೇ ಇವರ ಬಹುದೊಡ್ಡ ಸಾಧನೆ ಎಂದು ಟೀಕಿಸಿದರು.

ಕೋವಿಡ್ ಸಂದರ್ಭದಲ್ಲಿ ಜನರು ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ತೈಲ, ಅನಿಲ, ದಿನಸಿ ವಸ್ತುಗಳ ಬೆಲೆ ಗಗನಕ್ಕೇ ರಿದೆ. ಸರ್ಕಾರ ಇದರ ಸಂಪೂರ್ಣ ಜವಾ ಬ್ದಾರಿ ವಹಿಸಿಕೊಳ್ಳಬೇಕು ಎಂದರು.

ADVERTISEMENT

ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಪದೇ ಪದೇ ಡೀಸೆಲ್, ಪೆಟ್ರೋಲ್ ಜತೆಗೆ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಕೋವಿಡ್–19 ಸಂಕಷ್ಟದಲ್ಕಿ ಮತ್ತಷ್ಟು ತೊಂದರೆ ಕೊಡುತ್ತಿದೆ’ ಎಂದರು.

ಶಾಹುಲ್ ಹಮೀದ್ ಮಾತನಾಡಿ, ಆತ್ಮನಿರ್ಭರತೆಯ ವಿಶ್ವಾಸ ನೀಡಿದ ಕೇಂದ್ರ ಸರ್ಕಾರ ಜನರ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದೆ. ಒಂದು ತಿಂಗಳಲ್ಲಿ 18 ಬಾರಿ ತೈಲ ಬೆಲೆ ಏರಿಕೆ ಮಾಡಲಾಗಿದೆ. ₹30ಕ್ಕೆ ಸಿಗಬೇಕಿದ್ದ ಪೆಟ್ರೋಲ್ ಬೆಲೆ ₹100 ದಾಟಿದೆ. ಜನರ ಶಾಪ ಸರ್ಕಾರಕ್ಕೆ ತಟ್ಟದೇ ಇರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಸದಾಶಿವ ಉಳ್ಳಾಲ್, ರಮಾನಂದ ಪೂಜಾರಿ, ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.