ADVERTISEMENT

ಲಸಿಕೆಯಲ್ಲಿ ಕಾಂಗ್ರೆಸ್‌ ರಾಜಕೀಯ: ಸುಧೀರ್ ಶೆಟ್ಟಿ

ಗೊಂದಲ ಬಿಟ್ಟು ಜಿಲ್ಲಾಡಳಿತಕ್ಕೆ ಕೈಜೋಡಿಸಿ: ಸುಧೀರ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 3:43 IST
Last Updated 2 ಜೂನ್ 2021, 3:43 IST
ಸುಧೀರ್‌ ಶೆಟ್ಟಿ ಕಣ್ಣೂರು
ಸುಧೀರ್‌ ಶೆಟ್ಟಿ ಕಣ್ಣೂರು   

ಮಂಗಳೂರು: ಲಸಿಕೆ ವಿಚಾರದಲ್ಲಿ ಬಿಜೈನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮತ್ತು ಮಾಜಿ ಮೇಯರ್ ಗೊಂದಲ ಸೃಷ್ಟಿಸಿದ್ದಾರೆ ಎಂದು ಪಾಲಿಕೆಯ ಸಚೇತಕ ಸುಧೀರ್ ಶೆಟ್ಟಿ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಧೀರ್ ಶೆಟ್ಟಿ, ‘ಬಿಜೈ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮದ ಪೋಸ್ಟರ್ ಅನ್ನು ಮಾಜಿ ಮೇಯರ್ ತಮ್ಮ ಫೇಸ್‌ಬುಕ್ ಹಾಗೂ ವಾಟ್ಸ್‌ಆ್ಯಪ್‌ನಲ್ಲಿ ಹಾಕಿ, ಅತಿ ಹೆಚ್ಚು ಜನ ಸೇರುವಂತೆ ಮಾಡುವ ಮೂಲಕ ಗೊಂದಲ ನಿರ್ಮಾಣ ಮಾಡಿದ್ದಾರೆ’ ಎಂದರು.

ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಎಲ್ಲ ಶಾಸಕರು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚುವರಿ ವೆಂಟಿಲೇಟರ್‌ ಅಳವಡಿಸುವ ಕೆಲಸ, ಆಮ್ಲಜನಕ ಉತ್ಪಾದನೆ, ಆಮ್ಲಜನ ಶೇಖರಣಾ ಟ್ಯಾಂಕ್‌ ಅಳವಡಿಸಲಾಗುತ್ತಿದೆ. ಎಲ್ಲ ವೈದ್ಯಕೀಯ ಆಸ್ಪತ್ರೆಯ ವೈದ್ಯರನ್ನು ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಮೂಲಕ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ವಾರದಲ್ಲಿ ಎರಡು ದಿನ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಇಲಾಖೆ ಮೂಲಕ ಮಾಡಲಾಗುತ್ತಿದೆ. ಅದನ್ನು ಪತ್ರಿಕೆಯಲ್ಲಿ ಪ್ರಕಟಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಿದೆ ಎಂದರು.

ಪ್ರಧಾನಿ ಮೋದಿ ಅವರ ವಿಶೇಷ ಆಸಕ್ತಿಯಿಂದ ಆತ್ಮ ನಿರ್ಭರ ಭಾರತದ ಪರಿಕಲ್ಪನೆಯ ಮೂಲಕ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್‌ ಲಸಿಕೆಗಳನ್ನು ಕೇವಲ 8 ತಿಂಗಳಲ್ಲಿಯೇ ಕಂಡು ಹಿಡಿಯಲಾಗಿದೆ. ಈಗಾಗಲೇ 20.90 ಕೋಟಿ ಜನರಿಗೆ ಮೊದಲ ಡೋಸ್‌ ಲಸಿಕೆ ಹಾಕಲಾಗಿದೆ. ಮುಂದಿನ 2 ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಜನರಿಗೆ ಲಸಿಕೆ ನೀಡುವ ಕೆಲಸ ಮಾಡಲಾಗುವುದು ಎಂದರು.

ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಈ ರೀತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಪ್ರತಿಭಟನೆ ಹಾಗೂ ಜನರಿಗೆ ತಪ್ಪು ಮಾಹಿತಿ ನೀಡಿ ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಇದನ್ನು ಬಿಟ್ಟು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಕೋವಿಡ್‌ ನಿಯಂತ್ರಿಯಿಸುವ ಕೆಲಸ ಮಾಡಬೇಕು. ಇಂತಹ ಕ್ಷುಲ್ಲಕ ರಾಜಕೀಯ ಮಾಡಬಾರದು ಎಂದರು.

ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ, ರೂಪಾ ಡಿ. ಬಂಗೇರ, ರಣದೀಪ್, ರಮೇಶ್ ಹೆಗ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.