ಮಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಎಲ್ಲಕ್ಕೂ ಅತಿಯಾದ ಸುಂಕ ವಸೂಲಿ ಮಾಡುವ ಕೇಂದ್ರ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡುವ ಹಣದಿಂದ ಬೆಲೆ ಏರಿಕೆಯ ನಡುವೆಯೂ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.
ಕೆಪಿಸಿಸಿ ವಕ್ತಾರ ಅಮೃತ್ ಶೆಣೈ ಮಾತನಾಡಿ, ‘ಜನಸಾಮಾನ್ಯರು ಸರ್ಕಾರಕ್ಕೆ ನೀಡುವ ತೆರಿಗೆ ಹಣ ಕಾರ್ಪೊರೇಟ್ ಕಂಪನಿಗಳ ಪಾಲಾಗುತ್ತಿದೆ. ತೆರಿಗೆ ವಿನಾಯಿತಿ ಪಡೆಯುವ ಕಾರ್ಪೊರೇಟ್ ಕಂಪನಿಗಳು ಉದ್ಯೋಗ ಸೃಷ್ಟಿಗೆ ಬದಲಾಗಿ ಉದ್ಯೋಗ ನಷ್ಟಕ್ಕೆ ಕಾರಣವಾಗುತ್ತವೆ. ಅನೇಕ ಕಂಪನಿಗಳು ಉದ್ಯೋಗ ಕಡಿತಗೊಳಿಸುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ’ ಎಂದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ 70 ವರ್ಷಗಳಲ್ಲಿ ದೇಶದಲ್ಲಿ ಮಾಡಿದ ಆಸ್ತಿಯನ್ನು ಬಿಜೆಪಿ ನೇತೃತ್ವದ ಸರ್ಕಾರ ಮಾರಾಟ ಮಾಡುತ್ತಿದೆ. ನಮ್ಮ ತಲೆಮಾರಿನವರಿಗೆ ಸ್ವಾತಂತ್ರ್ಯ ಹೋರಾಟದ ವೇಳೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಲು ಅವಕಾಶ ಸಿಕ್ಕಿಲ್ಲ, ಆದರೆ ಈಗ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಸಂದರ್ಭ ಎದುರಾಗಿದೆ ಎಂದು ಹೇಳಿದರು.
ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿ, ಬಿಜೆಪಿ ದುರಾಡಳಿತವನ್ನು ಜನರೇ ಅಂತ್ಯಗೊಳಿಸಲಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಸುಹೈಲ್, ಇಬ್ರಾಹಿಂ ನವಾಜ್, ಅಶ್ರಫ್ ಬಜಾಲ್, ಸುಹಾನ್ ಆಳ್ವ, ನವಾಜ್ ನರಿಂಗಾನ, ಮಂಜುಳಾ ನಾಯಕ್, ರಫೀಕ್ ಕಣ್ಣೂರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.