ಮಂಗಳೂರು: ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಸುಟ್ಟು ಹಾಕಿದ ಅತ್ಯಾಚಾರಿ ಕೊಲೆಗಡುಕರಿಗೆ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಮಹಾನಗರ ಪಾಲಿಕೆ ಎದುರಿನ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಗುರುವಾರ ಸಂಜೆ ಮೊಂಬತ್ತಿ ಬೆಳಗಿ, ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.
ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ‘ಆರೋಪಿಗಳನ್ನು ಗಲ್ಲಿಗೇರಿಸಬೇಕು. ಯೋಗಿ ಆದಿತ್ಯನಾಥ್ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ’ ಎಂದು ಆಗ್ರಹಿಸಿದರು.
‘ಘಟನಾ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತಡೆದಿರುವುದನ್ನು ಯುವ ಕಾಂಗ್ರೆಸ್ ಖಂಡಿಸುತ್ತದೆ. ರಾಹುಲ್ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯನ್ನು ಹತ್ತಿಕ್ಕಲು ನಿಮ್ಮಿಂದ ಸಾಧ್ಯವಿಲ್ಲ. ಅದರ ಬದಲಾಗಿ, ಯೋಗಿ ಆದಿತ್ಯನಾಥ್ ಅವರಿಂದ ಆಗುತ್ತಿರುವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ತಡೆಯಿರಿ. ಇಲ್ಲದಿದ್ದರೆ, ಜನರೇ ಬಿಜೆಪಿ ಆಡಳಿತಕ್ಕೆ ಅಂತ್ಯ ಹಾಡುತ್ತಾರೆ’ ಎಂದು ಟೀಕಿಸಿದರು.
‘ಯೋಗಿ ಆದಿತ್ಯನಾಥ್ ಅಸಮರ್ಥರು. ಆರೋಪಿಗಳ ರಕ್ಷಣೆಗೆ ಮುಂದಾದವರು ನೈಜ ಹಿಂದೂ ಆಗಿರಲು ಸಾಧ್ಯವೇ ಇಲ್ಲ. ಹೆಣದ ಮೇಲೆ ಸವಾರಿ ಮಾಡುವ ಇವರ ಅಟ್ಟಹಾಸಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.
ಮಹಾನಗರ ಪಾಲಿಕೆ ಸದಸ್ಯ ಎ.ಸಿ. ವಿನಯ್ ರಾಜ್, ಮಾಜಿ ಸದಸ್ಯ ಪ್ರಕಾಶ್ ಸಾಲ್ಯಾನ್, ಮಹಮ್ಮದ್ ಕುಂಜತ್ತಬೈಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.