ADVERTISEMENT

ಮಂಗಳೂರು|BJP ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 7:57 IST
Last Updated 22 ಡಿಸೆಂಬರ್ 2025, 7:57 IST
   

ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸ್ವಾಯತ್ತ ಸಂಸ್ಥೆಯಾದ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧದ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಾಯಿಸಿದ್ದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಚೇರಿಗೆ ಮುತ್ತಿಗೆ ಹಾಕಲು ಸೋಮವಾರ ಯತ್ನಿಸಿದರು.

ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಂದ ಪಾದಯಾತ್ರೆ ಮೂಲಕ, ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯತ್ತ ಸಾಗಿದ ಪ್ರತಿಭಟನಕಾರರನ್ನು ಪೊಲೀಸರು ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿಯೇ ವಶಕ್ಕೆ ಪಡೆದರು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಾವಣೆ ಕೈಬಿಡಬೇಕು ಎಂದು ಪ್ರತಿಭಟನೆ ನಿರತರು ಒತ್ತಾಯಿಸಿದರು. ನ್ಯಾಷನಲ್‌ ಹೆರಾಲ್ಡ್ ಪತ್ರಿಕೆ ವಿರುದ್ದ ದಾಖಲಿಸಿರುವ ಪ್ರಕರಣ ದುರುದ್ದೇಶಪೂರಿತವಾಗಿದ್ದು, ಅದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ನಿರತರನ್ನು ತಡೆದು ವಶಕ್ಕೆ ಪಡೆದ ಪೊಲೀಸರು ಮೂರು ವಾಹನಗಳಲ್ಲಿ ಅವರನ್ನು ಕರೆದೊಯ್ದರು.

ADVERTISEMENT

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ವಿಜಯ್ ಇಂದರ್ ಸಿಂಗ್ಲಾ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಪಕ್ಷದ ಮುಖಂಡರಾದ ಬಿ.ರಮಾನಾಥ ರೈ, ಪದ್ಮರಾಜ ಪೂಜಾರಿ, ಮಿಥುನ್ ರೈ, ಅಪ್ಪಿ, ಇನಾಯತ್ ಅಲಿ, ಜೆ.ಆರ್.ಲೋಬೊ, ಸ್ಡ್ಯಾನಿ, ಸದಾಶಿವ ಉಲ್ಲಾಲ್ ಶಶಿಧರ ಹೆಗ್ಡೆ, ಸುರೇಂದ್ರ ಕಂಬಳಿ, ವಿಶ್ವಾಸದಾಸ್, ಪ್ರಕಾಶ್ ಸಾಲ್ಯಾನ್, ಶುಭೋದಯ ಆಳ್ಚ, ನೀರಜ್ ಪಾಲ್,, ಎಂ.ಎಸ್.ಮಹಮ್ಮದ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.