ಮಂಗಳೂರು: ಮುಸ್ಲಿಂ ಧರ್ಮೀಯರಿಂದಲೇ ಕೊರೊನಾ ವೈರಸ್ ಸೋಂಕು ಹರಡುತ್ತಿದೆ ಎಂಬ ತಪ್ಪು ಮಾಹಿತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷ ಸೃಷ್ಟಿಯಾಗುವ ಆತಂಕ ಎದುರಾಗಿದೆ. ತೊಕ್ಕೊಟ್ಟು, ಕೊಲ್ಯ, ಮಂಗಳೂರಿನ ಅಳಪೆ ಸೇರಿದಂತೆ ಹಲವೆಡೆ ಊರಿಗೆ ಮುಸ್ಲಿಂ ವ್ಯಾಪಾರಿಗಳ ಪ್ರವೇಶ ವಿರೋಧಿಸಿ ಫಲಕಗಳನ್ನು ಅಳವಡಿಸಲಾಗಿದೆ.
'ಕೊರೊನಾ ವೈರಸ್ ಸಂಪೂರ್ಣವಾಗಿ ಹೋಗುವವರೆಗೆ ನಮ್ಮ ಊರಿಗೆ ಯಾವುದೇ ಮುಸಲ್ಮಾನ ವ್ಯಾಪಾರಿಗೆ ಪ್ರವೇಶವಿಲ್ಲ' ಎಂಬ ಫಲಕಗಳನ್ನು ಗ್ರಾಮಗಳ ಪ್ರಮುಖ ಸ್ಥಳಗಳಲ್ಲಿ ಕಿಡಿಗೇಡಿಗಳು ಅಳವಡಿಸಿದ್ದಾರೆ.
ಕೆಲವು ಸ್ಥಳಗಳಲ್ಲಿ 'ಹಿಂದೂ ಧರ್ಮೀಯರು' ಎಂಬ ಹೆಸರಿನಲ್ಲಿ ಫಲಕ ಹಾಕಲಾಗಿದೆ. ಇನ್ಜು ಕೆಲವೆಡೆ 'ಗ್ರಾಮಸ್ಥರು' ಎಂಬ ಹೆಸರಿನಲ್ಲಿ ಅಳವಡಿಸಲಾಗಿದೆ.
ತಬ್ಲೀಗ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡವರಲ್ಲಿ ಸೋಂಕು ಕಾಣಿಸಿಕೊಂಡ ಬಳಿಕ ಈ ಬಗೆಯ ಕೃತ್ಯಗಳು ಹೆಚ್ಚುತ್ತಿವೆ. ಮುಸ್ಲಿಂ ಧರ್ಮೀಯರನ್ನು ನಿಂದಿಸಿ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣಗಳನ್ನೂ ದಾಖಲಿಸಿದ್ದಾರೆ.
ಮುಸ್ಲಿಂ ವ್ಯಾಪಾರಿಗಳ ಪ್ರವೇಶ ವಿರೋಧಿಸಿ ಫಲಕ ಅಳವಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.