ಬೆಳ್ತಂಗಡಿ (ದಕ್ಷಿಣ ಕನ್ನಡ): ‘ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿವೆ’ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ವ್ಯಕ್ತಿ, ಶುಕ್ರವಾರ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ವಕೀಲರಾದ ಓಜಸ್ವಿ ಗೌಡ, ಸಚಿನ್ ದೇಶಪಾಂಡೆ ಅವರ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ಈ ವ್ಯಕ್ತಿ, ಗುರುತು ಪತ್ತೆಯಾಗದಂತೆ ತಲೆಯಿಂದ ಕಾಲಿನವರೆಗೆ ಕಪ್ಪು ಬಣ್ಣದ ಮುಸುಕು ಧರಿಸಿದ್ದರು. ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.
ನಂತರ ಈ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಹೇಳಿಕೆ ಪಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.
‘ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದ ದೂರುದಾರರ ದೂರನ್ನು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 183ರ ಅಡಿಯಲ್ಲಿ ನ್ಯಾಯಾಲಯ ದಾಖಲಿಸಿಕೊಂಡಿದೆ’ ಎಂದು ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ದೂರುದಾರ ನ್ಯಾಯಾಲಯದಲ್ಲಿ ಹೇಳಿಕೆ ನೀಡುವಾಗ ನಿಮ್ಮಿಬ್ಬರಲ್ಲಿ ಒಬ್ಬ ವಕೀಲರು ಜೊತೆಗಿರುವಂತೆ ನಮಗೆ ತಿಳಿಸಿದ್ದರು. ತಾವು ಅನಕ್ಷರಸ್ಥರಾಗಿದ್ದು, ಈವರೆಗೆ ಯಾವುದೇ ನ್ಯಾಯಾಲಯಕ್ಕೆ ಹೋಗಿಲ್ಲ ಎಂದು ಹೇಳಿಕೊಂಡಿದ್ದರು. ಈ ಅಂಶವನ್ನು ನಾವು ನ್ಯಾಯಾಲಯಕ್ಕೆ ತಿಳಿಸಿದ್ದೆವು. ಆದರೆ, ನ್ಯಾಯಾಲಯವು ಹೇಳಿಕೆ ಪಡೆಯುವ ವೇಳೆ ವಕೀಲರು ಹಾಜರಿರುವುದನ್ನು ಒಪ್ಪಲಿಲ್ಲ’ ಎಂದು ಅವರು ತಿಳಿಸಿದ್ದಾರೆ.
‘ದೂರುದಾರರಿಗೆ ಸಾಕ್ಷಿ ರಕ್ಷಣಾ ಯೋಜನೆ 2018ರ ಅಡಿಯಲ್ಲಿ ಸೂಕ್ತ ರಕ್ಷಣೆ ಒದಗಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಜುಲೈ 10ರಂದು ನಮಗೆ ತಿಳಿಸಿದ್ದರು. ಈ ಕಾರಣಕ್ಕೆ ನ್ಯಾಯಾಲಯ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಕರ್ನಾಟಕ ಸರ್ಕಾರಕ್ಕೆ ದೂರುದಾರರು ಕೃತಜ್ಞತೆ ಸಲ್ಲಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
‘ನನಗೆ ಜೀವಬೆದರಿಕೆ ಒಡ್ಡಿ, ಅಪರಾಧ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ ಹಲವಾರು ಮೃತದೇಹಗಳ ವಿಲೇವಾರಿ ಮಾಡಿದ್ದು, ಈ ಬಗ್ಗೆ ಪಾಪಪ್ರಜ್ಞೆ ಕಾಡುತ್ತಿದೆ. ನನಗೆ ಹಾಗೂ ನನ್ನ ಕುಟುಂಬದವರಿಗೆ ಕಾನೂನಾತ್ಮಕ ರಕ್ಷಣೆ ದೊರೆತರೆ ಕೃತ್ಯ ನಡೆಸಿದವರ ಮಾಹಿತಿ ಹಾಗೂ ನಾನು ಮೃತದೇಹ ವಿಲೇವಾರಿ ಮಾಡಿದ ಸ್ಥಳಗಳನ್ನು ತಿಳಿಸಲು ಸಿದ್ಧನಿದ್ದೇನೆ’ ಎಂದು ಆ ವ್ಯಕ್ತಿ ಜುಲೈ 3ರಂದು ನೀಡಿದ್ದ ದೂರಿನಲ್ಲಿ ತಿಳಿಸಿದ್ದರು.
ಅದರಂತೆ ದೂರಿನ ಬಗ್ಗೆ ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಿಸಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದರು.
ದೂರುದಾರರು ದೂರಿನಲ್ಲಿ ತಮ್ಮ ಹೆಸರು ಮತ್ತು ಮಾಹಿತಿಯನ್ನು ಗೋಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಕಾರಣ ಅವರ ವಿವರವನ್ನು ಬಹಿರಂಗ ಗೊಳಿಸಲಾಗದು ಎಂದು ಹೇಳಿದ್ದರು. ಈಗಲೂ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.