ADVERTISEMENT

ಪೊಲೀಸ್ ಅತಿರೇಕ ವಿರುದ್ಧ ಹೋರಾಟ: ಕಾಂಗ್ರೆಸ್‌

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 12:58 IST
Last Updated 4 ಜೂನ್ 2021, 12:58 IST

ಮಂಗಳೂರು: ‘ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದಕ್ಕಾಗಿ ಪಕ್ಷದ ಯುವ ವಕೀಲ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ನಿಯಮ ಮೀರಿ ಪೊಲೀಸರು ಕ್ರಮ ಜರುಗಿಸಿದರೆ ಎಸ್ಪಿ, ಐಜಿಪಿ, ಪೊಲೀಸ್ ಕಮೀಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಡಿಸಿಸಿ ಅಧ್ಯಕ್ಷ, ಕೆ. ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡಬಾರದು. ಸೋಶಿಯಲ್ ಮಿಡಿಯಾದಲ್ಲಿ ಸಂದೇಶ ಫಾರ್ವಡ್ ಮಾಡುವುದು ಅಪರಾಧ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಪೊಲೀಸರು ವಿಶೇಷ ಆಸಕ್ತಿ ವಹಿಸಿ ರಾತೋರಾತ್ರಿ ಬಂಧಿಸುವ ಅಗತ್ಯ ಏನಿತ್ತು‘ ಎಂದವರು ಪ್ರಶ್ನಿಸಿದರು.

ಆಡಳಿತ ಪಕ್ಷ ಮುಖಂಡರಿಂದ ಪ್ರೇರಿತರಾದ ಪೊಲೀಸರ ಈ ಕ್ರಮದಿಂದ ಕಾಂಗ್ರೆಸ್ ಕಾರ್ಯಕರ್ತರು ಎದೆಗುಂದುವುದಿಲ್ಲ. ಸರ್ಕಾರದ ವೈಫಲ್ಯ ಬಯಲು ಮಾಡುತ್ತಿರುವುದನ್ನು ಸಹಿಸದೆ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಮಾಡುತ್ತಿದೆ ಎಂದವರು ಆರೋಪಿಸಿದರು.

ADVERTISEMENT

ಚಂಡಮಾರುತದಿಂದ ನಷ್ಟಕ್ಕೊಳಗಾದ ಜನರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ ಎಂದು ಮಾಜಿ ಸಚಿವರಾದ ಅಭಯಚಂದ್ರ ಜೈನ್ ಮತ್ತು ಯು.ಟಿ.ಖಾದರ್ ಆಪಾದಿಸಿದರು. ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್, ಶುಭೋದಯ ಆಳ್ವ, ಲುಕ್ಮಾನ್ ಬಂಟ್ವಾಳ್, ಮಹಾಬಲ ಮಾರ್ಲ, ನಿತ್ಯಾನಂದ ಶೆಟ್ಟಿ, ಲಾರೆನ್ಸ್ ಡಿಸೋಜ, ಶೇಖರ ಪೂಜಾರಿ, ನವೀನ್ ಡಿ ಸೋಜ, ವಸಂತ ಬರ್ನಾಡ್, ನಜೀರ್ ಬಜಾಲ್ ಉಪಸ್ಥಿತರಿದ್ದರು.

ಪ್ರತಿದಿನ 1 ಕೋಟಿ ಲಸಿಕೆ ನೀಡಿ: ರಾಷ್ಟ್ರಪತಿಗೆ ಮನವಿ
ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದ್ದು, ಜಿಲ್ಲಾಧಿಕಾರಿ ಮೂಲಕ ಮನವಿಪತ್ರ ರವಾನಿಸಿದರು.

‘ದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ವಿಳಂಬ ಆಗಲಿರುವುದುರಿಂದ ದಿನದ ಗುರಿಯನ್ನು ಒಂದು ಕೋಟಿಗೆ ನಿಗದಿ ಮಾಡಬೇಕು‘ ಮನವಿ ಮಾಡಲಾಗಿದೆ. ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಮೊಹಿಯುದ್ದೀನ್ ಬಾವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.