ADVERTISEMENT

ಮಂಗಳೂರು: ಮನೆಗೆ ತೆರಳಿ ಅಶಕ್ತರಿಗೆ ಲಸಿಕೆ

ರಾಜ್ಯದಲ್ಲೇ ಪ್ರಥಮ ಪ್ರಯೋಗ: ಮೇಯರ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 12:05 IST
Last Updated 6 ಜುಲೈ 2021, 12:05 IST
ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಶಕ್ತರ ಮನೆಗೆ ತೆರಳಿ ಲಸಿಕೆ ನೀಡಲಾಯಿತು.
ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಶಕ್ತರ ಮನೆಗೆ ತೆರಳಿ ಲಸಿಕೆ ನೀಡಲಾಯಿತು.   

ಮಂಗಳೂರು: ಅಶಕ್ತರ ಮನೆಗೆ ತೆರಳಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳವಾರ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು.

ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ‘ಮಹಾನಗರ ಪಾಲಿಕೆ ಸಭೆಯಲ್ಲಿ ನಿರ್ಣಯಿಸಿದಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ 70 ವಷ೯ ಮೇಲಿನವರು, ಅನಾರೋಗ್ಯಪೀಡಿತರು, ಕೇಂದ್ರಕ್ಕೆ ತೆರಳಿ ಲಸಿಕೆಯನ್ನು ಪಡೆಯಲು ಸಾಧ್ಯವಾಗದವರಿಗೆ ಮನೆಗೆ ಹೋಗಿ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲೇ ಪ್ರಥಮವಾಗಿ ಮಂಗಳೂರು ನಗರದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ’ ಎಂದು ಪ್ರೇಮಾನಂದ ಶೆಟ್ಟಿ ತಿಳಿಸಿದರು.

ಎಲ್ಲ ವಾರ್ಡ್‌ಗಳಲ್ಲಿ ಪಾಲಿಕೆಯ ಸದಸ್ಯರನ್ನು ಸೇರಿಸಿಕೊಂಡು, ಮನೆ–ಮನೆಗೆ ತೆರಳಿ, ಕೋವಿಡ್ ತಡೆ ಲಸಿಕೆ ನೀಡುವ ಅಭಿಯಾನ ನಡೆಸಲಾಗುತ್ತದೆ ಎಂದರು. ಪಾಲಿಕೆಯ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ರಾಜೇಶ್, ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮ, ಯತೀಶ್ ಬೈಕಂಪಾಡಿ, ಸುಕ್‌ಪಾಲ್ ಪೊಳಲಿ ಇದ್ದರು.

ADVERTISEMENT

ಮಾರುಕಟ್ಟೆಗೆ ಭೇಟಿ: ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಉರ್ವಸ್ಟೋರ್ ಮಾರುಕಟ್ಟೆಗೆ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿದರು. ಮಾರುಕಟ್ಟೆಯಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿದರು. ಪ್ರಸ್ತುತ ಮಾರುಕಟ್ಟೆಯಲ್ಲಿ ಬಾಕಿಯಿರುವ ಕಾಮಗಾರಿಗಳ ಬಗ್ಗೆ ವ್ಯಾಪಾರಸ್ಥರು ತಿಳಿಸಿದರು. ಉರ್ವಸ್ಟೋರ್ ಮಾರುಕಟ್ಟೆಯನ್ನು ಸುಸಜ್ಜಿತ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಕೆಲವು ಅಪೂರ್ಣ ಕಾಮಗಾರಿಗಳನ್ನು ತುರ್ತು ಪೂರ್ಣಗೊಳಿಸಿ, ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರೇಮಾನಂದ ಶೆಟ್ಟಿ ಭರವಸೆ ನೀಡಿದರು. ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಜಯಲಕ್ಷ್ಮಿ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.