ADVERTISEMENT

ಮಂಗಳೂರು: ಆಯಾ ವಾರ್ಡ್‌ಗಳಲ್ಲಿ ವಹಿವಾಟಿಗೆ ಸೂಚನೆ

ಕೇಂದ್ರ ಮಾರುಕಟ್ಟೆಯಲ್ಲಿ ಪಾಲನೆಯಾಗದ ಮಾರ್ಗಸೂಚಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 4:06 IST
Last Updated 30 ಏಪ್ರಿಲ್ 2021, 4:06 IST
ಮಂಗಳೂರಿನ ಕೇಂದ್ರ ಮಾರುಕಟ್ಟೆಯಲ್ಲಿ ಗುರುವಾರ ಕಂಡು ಬಂದ ಜನಜಂಗುಳಿ
ಮಂಗಳೂರಿನ ಕೇಂದ್ರ ಮಾರುಕಟ್ಟೆಯಲ್ಲಿ ಗುರುವಾರ ಕಂಡು ಬಂದ ಜನಜಂಗುಳಿ   

ಮಂಗಳೂರು: ನಗರದ ಕೇಂದ್ರ ಮಾರುಕಟ್ಟೆಯ ಸುತ್ತ ವ್ಯಾಪಾರಕ್ಕೆ ಅನುಮತಿ ನೀಡಿಲ್ಲ. ಈ ಪ್ರದೇಶದಲ್ಲಿ ನಡೆಯುವ ವ್ಯಾಪಾರ, ವಹಿವಾಟು ಅನಧಿಕೃತವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಈ ಸಂದರ್ಭದಲ್ಲಿ ಕೇಂದ್ರ ಮಾರುಕಟ್ಟೆ ಸುತ್ತಲಿನ ಪ್ರದೇಶದಲ್ಲಿ ಮಾರ್ಗಸೂಚಿಯ ಪಾಲನೆ ಆಗುತ್ತಿಲ್ಲ ಎಂದರು.

ಕೇಂದ್ರ ತರಕಾರಿ ಮತ್ತು ಮೀನು ಮಾರುಕಟ್ಟೆಯ ಸುತ್ತಲಿನ ಪ್ರದೇಶಗಳಲ್ಲಿ ಹಲವಾರು ಬೀದಿಬದಿ ವ್ಯಾಪಾರಿಗಳು ಹಾಗೂ ಸಗಟು ವ್ಯಾಪಾರಿಗಳು ಸೇರಿದಂತೆ ಸಾವಿರಾರು ಜನ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಗುಂಪು ಸೇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ಸಂದರ್ಭದಲ್ಲಿ ಸುರಕ್ಷಿತ ಅಂತರ ಹಾಗೂ ಮುಖಗವಸುಗಳನ್ನು ಧರಿಸದೇ ಸಾಂಕ್ರಾಮಿಕ ರೋಗವು ಹರಡಲು ಅನುವು ಮಾಡಿಕೊಡುವ ರೀತಿಯಲ್ಲಿ ವ್ಯಾಪಾರ ವಹಿವಾಟು ನಡೆದಿರುತ್ತದೆ ಎಂದು ಹೇಳಿದರು.

ADVERTISEMENT

ಈಗಾಗಲೇ ಸಗಟು ವ್ಯಾಪಾರವನ್ನು ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ವರ್ಗಾಯಿಸಲಾಗಿದೆ. ಕೇಂದ್ರ ಮಾರುಕಟ್ಟೆಯ ಸುತ್ತಮುತ್ತ ಯಾರಿಗೂ ವ್ಯಾಪಾರ ಮಾಡಲು ಪರವಾನಗಿ ಅಥವಾ ಅನುಮತಿ ನೀಡಿಲ್ಲ ಎಂದರು.

ಸಗಟು ವ್ಯಾಪಾರವನ್ನು ಬೈಕಂಪಾಡಿ ಎಪಿಎಂಸಿ ಯಾರ್ಡ್‌ನಲ್ಲೇ ಮಾಡಬೇಕು. ಚಿಲ್ಲರೆ ವ್ಯಾಪಾರವನ್ನು ವಿಕೇಂದ್ರೀಕೃತ ರೀತಿಯಲ್ಲಿ ಆಯಾ ವಾರ್ಡ್‌ ಮಟ್ಟದಲ್ಲಿ ಮಾರುಕಟ್ಟೆ ಮತ್ತು ಅಂಗಡಿಗಳ ಮೂಲಕ ಮುಂದುವರಿಸಬೇಕು ಎಂದು ಸೂಚನೆ ನೀಡಿದರು.

ವಿಕೇಂದ್ರಿಕೃತ ಮಾದರಿಯಲ್ಲಿ ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಹಣ್ಣು ತರಕಾರಿ ಹಾಗೂ ದಿನಸಿ ಪೂರೈಕೆಯಾಗುವಲ್ಲಿ ನೋಡಿಕೊಳ್ಳುವಂತೆ ಮಹಾನಗರ ಪಾಲಿಕ ಆಯುಕ್ತರಿಗೆ ನಿರ್ದೇಶನ ನೀಡಿದರು.

ಕೇಂದ್ರ ಮಾರುಕಟ್ಟೆಯ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಸೂಕ್ತ ಕ್ರಮ ಜರುಗಿಸುವಂತೆ ಸಂಚಾರ ವಿಭಾಗದ ಡಿಸಿಪಿಗೆ ಸೂಚಿಸಿದರು.

ಶಾಸಕ ಡಿ.ವೇದವ್ಯಾಸ ಕಾಮತ್‌, ಪೊಲೀಸ್ ಕಮಿಷನರ್‌ ಎನ್‌. ಶಶಿಕುಮಾರ್‌, ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್‌, ಡಿಸಿಪಿ ಹರಿರಾಂ ಶಂಕರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.