ADVERTISEMENT

10 ಮಂದಿ ಕೋವಿಡ್‌ ಸೋಂಕಿತರ ಸಾವು

ಬುಧವಾರ ಜಿಲ್ಲೆಯ 149 ಜನರಲ್ಲಿ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 15:49 IST
Last Updated 5 ಆಗಸ್ಟ್ 2020, 15:49 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಮಂಗಳೂರು: ಹೊರ ಜಿಲ್ಲೆಯ ಒಬ್ಬ ವ್ಯಕ್ತಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತು ಮಂದಿ ಕೋವಿಡ್‌–19 ಸೋಂಕಿತರು ಮೃತಪಟ್ಟಿರುವುದನ್ನು ಜಿಲ್ಲಾಡಳಿತ ಬುಧವಾರ ಅಧಿಕೃತವಾಗಿ ಘೋಷಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 190ಕ್ಕೇರಿದೆ.

‘ಮಂಗಳೂರು ತಾಲ್ಲೂಕಿನಲ್ಲಿ ಏಳು ಮಂದಿ, ಪುತ್ತೂರು ಮತ್ತು ಬೆಳ್ತಂಗಡಿ ತಾಲ್ಲೂಕಿನ ತಲಾ ಒಬ್ಬರು ಹಾಗೂ ಹೊಸ ಜಿಲ್ಲೆಯ ಒಬ್ಬ ವ್ಯಕ್ತಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದಾರೆ. ಎಲ್ಲರಿಗೂ ಗಂಭೀರ ಸ್ವರೂಪದ ಅನ್ಯ ಕಾಯಿಲೆಗಳಿದ್ದವು’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

149 ಮಂದಿಗೆ ಸೋಂಕು:ದಕ್ಷಿಣ ಕನ್ನಡ ಜಿಲ್ಲೆಯ 149 ಜನರಿಗೆ ಕೋವಿಡ್‌ ಸೋಂಕು ತಗುಲಿರುವುದು ಬುಧವಾರ ಲಭಿಸಿದ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಮಂಗಳೂರು ತಾಲ್ಲೂಕಿನ 79, ಬೆಳ್ತಂಗಡಿ 21, ಪುತ್ತೂರು 20, ಬಂಟ್ವಾಳ 16, ಸುಳ್ಯ ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಮಾದರಿ ನೀಡಿದ್ದ ಹೊರ ಜಿಲ್ಲೆಗಳ 12 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ADVERTISEMENT

ಶೀತ ಜ್ವರದಿಂದ ಬಳಲುತ್ತಿದ್ದ (ಐಎಲ್‌ಐ) 64, ಉಸಿರಾಟದ ತೀವ್ರ ತೊಂದರೆ ಎದುರಿಸುತ್ತಿದ್ದ 12 ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ಜನರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ. ಉಳಿದ 46 ಜನರಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ.

82 ಮಂದಿ ಗುಣಮುಖ:ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 6,542ಕ್ಕೆ ತಲುಪಿದೆ. ಈ ಪೈಕಿ ಬುಧವಾರ 82 ಮಂದಿ ಸೇರಿದಂತೆ 3,009 ಜನರು ಸೋಂಕಿತರು ಈವರೆಗೆ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3,343 ಸಕ್ರಿಯ ಪ್ರಕರಣಗಳಿವೆ.

ಸೋಂಕಿನ ಯಾವುದೇ ಲಕ್ಷಣಗಳಿಲ್ಲದ ಸುಮಾರು 1,500 ಜನರು ತಮ್ಮ ಮನೆಗಳಲ್ಲೇ ಪ್ರತ್ಯೇಕ ವಾಸದಲ್ಲಿದ್ದಾರೆ. ಉಳಿದವರು ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳಿಗೆ ದಾಖಲಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.