ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ 322 ಮಂದಿಗೆ ಕೋವಿಡ್–19 ದೃಢವಾಗಿದ್ದು, 277 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ 12 ಮಂದಿಗೆ ಕೋವಿಡ್–19 ಇರುವುದು ಶುಕ್ರವಾರ ಖಚಿತವಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 23,761 ಜನರಿಗೆ ಸೋಂಕು ದೃಢವಾಗಿದ್ದು, ಈ ಪೈಕಿ 17,365 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ 5,839 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 557 ಕ್ಕೆ ತಲುಪಿದೆ.
ಇದುವರೆಗೆ 1,66,456 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,42,695 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಕಾಸರಗೋಡಿನಲ್ಲಿ 476 ಮಂದಿಗೆ ಸೋಂಕು:
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 476 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 11,734ಕ್ಕೆ ಏರಿಕೆಯಾಗಿದೆ. 476 ಮಂದಿಯ ಪೈಕಿ 457 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. 13 ಮಂದಿ ಹೊರರಾಜ್ಯ, 6 ಮಂದಿ ವಿದೇಶಗಳಿಂದ ಬಂದವರಾಗಿದ್ದು, ಆರು ಆರೋಗ್ಯ ಸಿಬ್ಬಂದಿಗಳಿಗೆ ಸೋಂಕು ತಗಲಿದೆ.
ಶುಕ್ರವಾರ 165 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,225 ಸಕ್ರಿಯ ಪ್ರಕರಣಗಳಿದ್ದು, 1,751 ಮಂದಿ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಸಕ ಕಾಮತ್ ಕ್ವಾರಂಟೈನ್
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಆಪ್ತ ಕಾರ್ಯದರ್ಶಿಗೆ ಕೋವಿಡ್–19 ದೃಢವಾಗಿದ್ದು, ಶಾಸಕರು ಕ್ವಾರಂಟೈನ್ಗೆ ಒಳಗಾಗಿದ್ದಾರೆ.
‘ಗುರುವಾರ ನನ್ನ ಆಪ್ತ ಕಾರ್ಯದರ್ಶಿಗೆ ಕೋವಿಡ್ ಧೃಡಪಟ್ಟಿದೆ. ಕೆಲಸದ ವಿಚಾರವಾಗಿ ಅವರನ್ನು ಹಲವಾರು ಬಾರಿ ಭೇಟಿಯಾಗಿದ್ದರಿಂದ ಸರ್ಕಾರದ ನಿಯಮಾವಳಿ ಪ್ರಕಾರ ಗುರುವಾರ ಸಂಜೆಯಿಂದ ಸ್ವಯಂ ಕ್ವಾರೆಂಟೈನ್ನ್ ಆಗಿದ್ದೇನೆ. ಸಾರ್ವಜನಿಕರು ಸಹಕರಿಸಬೇಕು. ಜಾಗೃತರಾಗಿರಬೇಕು ಎಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.