ಮಂಗಳೂರು: ಬಂಟ್ವಾಳ ತಾಲ್ಲೂಕು ಮೆಲ್ಕಾರಿನಲ್ಲಿ ನಡೆದ ಯುವಕನ ಕೊಲೆ ಪ್ರಕರಣದ ಆರೋಪಿಯನ್ನು ಶನಿವಾರ ಬೆಳಿಗ್ಗೆ ಗುಂಡ್ಯದಲ್ಲಿ ಬಂಧಿಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಪೊಲೀಸರು ಕಾಲಿಗೆ ಗುಂಡು ಹೊಡೆದು ಒಬ್ಬನನ್ನು ಬಂಧಿಸಿದ್ದಾರೆ.
ಕಲ್ಲಡ್ಕದ ಖಲೀಲ್ ಬಂಧಿತ ಆರೋಪಿ. ಕಾರ್ಯಾಚರಣೆ ವೇಳೆ ಬಂಟ್ವಾಳ ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕದ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು ತಂಡವೊಂದು ಕೊಲೆ ಮಾಡಿತ್ತು. ಪರಾರಿಯಾಗಿದ್ದ ಆರೋಪಿಗಳು ಶನಿವಾರ ಬೆಳಿಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗುತ್ತಿರುವ ಮಾಹಿತಿ ಪಡೆದ ಪೊಲೀಸರು ಗುಂಡ್ಯದಲ್ಲಿ ಕಾರನ್ನು ಅಡ್ಡಗಟ್ಟಿದ್ದಾರೆ.
ಕಾರ್ಯಾಚರಣೆ ವೇಳೆ ಆರೋಪಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದ. ಇದರಿಂದ ಬಂಟ್ವಾಳ ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಬಂಟ್ವಾಳ ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅವಿನಾಶ್, ಆರೋಪಿ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿ ಖಲೀಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಗಾಯಗಳಾಗಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.