
ದಕ್ಷಿಣ ಕನ್ನಡ ಜಿಲ್ಲೆಯ ಪೊಲಿಯೊ ಹನಿ ಅಭಿಯಾನಕ್ಕೆ ಮಂಜುನಾಥ ಭಂಡಾರಿ ಭಾನುವಾರ ಚಾಲನೆ ನೀಡಿದರು. ಡಾ.ಎಚ್.ಆರ್.ತಿಮ್ಮಯ್ಯ, ದರ್ಶನ್ ಎಚ್.ವಿ, ನರ್ವಾಡೆ ವಿನಾಯಕ ಕಾರ್ಬಾರಿ, ಡಾ.ದುರ್ಗಾಪ್ರಸಾದ್, ಶಾಂತಾರಾಮ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು
ಮಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಶೇ 96.80ರಷ್ಟು ಗುರಿ ಸಾಧನೆ ಮಾಡಲಾಗಿದೆ.
ಜಿಲ್ಲೆಯಲ್ಲಿ 5 ವರ್ಷದೊಳಗಿನ 1,41,594 ಮಕ್ಕಳಿಗೆ ಪೊಲಿಯೊ ಹನಿ ಹಾಕಲು ಯೋಜಿಸಲಾಗಿತ್ತು. ಭಾನುವಾರ ಒಟ್ಟು 1,37,057 ಮಕ್ಕಳಿಗೆ ಪೊಲಿಯೊ ಹನಿ ಹಾಕಲಾಗಿದೆ. ಇದೇ 24 ರವರೆಗೆ ಜಿಲ್ಲೆಯಲ್ಲಿ ಪೊಲಿಯೊ ಹನಿ ಹಾಕಿಸುವ ಅಭಿಯಾನ ಮುಂದುವರಿಯಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಪೊಲಿಯೊ ಹನಿ ಹಾಕಿಸದವರು ಇನ್ನೂ ಹನಿ ಹಾಕಿಸಬಹುದು. ಗ್ರಾಮೀಣ ಪ್ರದೇಶದಲ್ಲಿ ಇನ್ನೂ 3 ದಿನ ಹಾಗೂ ನಗರ ಪ್ರದೇಶದಲ್ಲಿ 4 ದಿನ ಅಭಿಯಾನ ಮುಂದುವರಿಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ.
ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಚಾಲನೆ ನೀಡಿದರು.
‘ಒಂದು ವರ್ಷದಿಂದ ಐದು ವರ್ಷಗಳ ಒಳಗಿನ ಎಲ್ಲಾ ಮಕ್ಕಳಿಗೂ ಪೊಲಿಯೊ ಹನಿ ಕೊಡಿಸುವ ಮೂಲಕ, ಮಕ್ಕಳನ್ನು ಶಾಶ್ವತವಾಗಿ ಅಂಗವೈಕಲ್ಯಕ್ಕೆ ಒಳಗಾಗುವ ಅಪಾಯ ತಪ್ಪಿಸಬೇಕು’ ಎಂದು ಮಂಜುನಾಥ ಭಂಡಾರಿ ತಿಳಿಸಿದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ, ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ್, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಜಗದೀಶ್, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಮ ಶೆಟ್ಟಿ, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ. ರಾಜೇಶ್, ನೋಡಲ್ ಅಧಿಕಾರಿ ಡಾ.ಮಮತಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.