ಪುತ್ತೂರು: ನಗರಕ್ಕೆ ಸುಸಜ್ಜಿತ ಮೆಡಿಕಲ್ ಕಾಲೇಜು ಮಂಜೂರುಗೊಳಿಸಬೇಕು ಎಂದು ಆಗ್ರಹಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ವತಿಯಿಂದ ಸೋಮವಾರ ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಸಿ, ಜನಾಭಿಪ್ರಾಯ ಸಂಗ್ರಹಕ್ಕಾಗಿ ಸಾರ್ವಜನಿಕರಿಗೆ ಕರಪತ್ರ ಹಂಚಲಾಯಿತು.
ನಗರದ ದರ್ಬೆ ವೃತ್ತದ ಬಳಿ ಜಾಥಾ ಉದ್ಘಾಟಿಸಿದ ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಮಾತನಾಡಿ, ‘ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಈಗಾಗಲೇ ಬನ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ 40 ಎಕರೆ ಸ್ಥಳವನ್ನು ಸರ್ಕಾರ ಮೀಸಲಿರಿಸಿ, ಜಾಗಕ್ಕೆ ಪಹಣಿ ಪತ್ರವನ್ನೂ ನಮೂದಿಸಿದೆ. ಆದರೆ, ಕಾಲೇಜು ಸ್ಥಾಪನೆ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಸ್ಥಾಪನೆಗೊಂಡಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಬಂಟ್ವಾಳ ತಾಲ್ಲೂಕುಗಳು ಹಾಗೂ ಕಾಸರಗೋಡು ಭಾಗದ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ಲಭಿಸುತ್ತದೆ. ಈ ಹಿನ್ನಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಆಗಬೇಕಾಗಿದೆ’ ಎಂದರು.
ಹೋರಾಟ ಸಮಿತಿಯ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ, ಉಪಾಧ್ಯಕ್ಷರಾದ ಝೇವಿಯರ್ ಡಿಸೋಜ, ರೂಪೇಶ್ ರೈ ಅಲಿಮಾರ್, ವಿಶ್ವಪ್ರಸಾದ್ ಸೇಡಿಯಾಪು, ರಾಜ್ಯ ದಾರಿಮೀಸ್ ಒಕ್ಕೂಟದ ಅಧ್ಯಕ್ಷ ಎಸ್.ಬಿ. ಮುಹಮ್ಮದ್ ದಾರಿಮಿ, ಹೋರಾಟ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಪುತ್ತೂರು ವರ್ತಕರ ಸಂಘದ ಅಧ್ಯಕ್ಷ ಜೋನ್ ಕುಟಿನ್ಹೊ, ಕಾರ್ಯದರ್ಶಿ ಉಲ್ಲಾಸ್ ಪೈ, ನಗರಸಭಾ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಮೌರಿಸ್ ಮಸ್ಕರೇನಸ್, ಅಮಳ ರಾಮಚಂದ್ರ, ಬಾಲಕೃಷ್ಣ ಗೌಡ ಕೆಮ್ಮಾರ, ಡಾ.ಬಿ.ಕೆ.ವಿಶುಕುಮಾರ್, ಎಚ್. ಮಹಮ್ಮದ್ ಅಲಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಸಂತೋಷ್ ರೈ ಚಿಲ್ಮೆತ್ತಾರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.